ಬೆಂಗಳೂರು, ನ. 26, 2020 (ಕರಾವಳಿ ಟೈಮ್ಸ್) : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕ್ಯು.ಎಸ್.ಕ್ಯು.ಎ.ಎ.ಸಿ. ವತಿಯಿಂದ ಎನ್ ಸಿ ಆರ್ ಟಿ ಮಾರ್ಗದರ್ಶನದಲ್ಲಿ ನಡೆಸಲಾಗುವ ಎನ್ಟಿಎಸ್ ಮೊದಲನೇ ಹಂತದ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು, ವಿದ್ಯಾರ್ಥಿ ವೇತನ ದೊರೆಯುವ ಹಿನ್ನೆಲೆಯಲ್ಲಿ ಈ ಪರೀಕ್ಷೆಯನ್ನು ಹೆಚ್ಚಿನ ವಿದ್ಯಾರ್ಥಿಗಳು ತೆಗೆದುಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪ್ರಸ್ತುತ ವರ್ಷದಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಪರೀಕ್ಷೆ ತೆಗೆದುಕೊಳ್ಳಬಹುದಾಗಿದ್ದು, ಪರೀಕ್ಷೆ 2021ನೇ ಜನವರಿ 24ರಂದು ನಡೆಯಲಿದೆ.
ಸರಕಾರಿ, ಅನುದಾನಿತ, ಅನುದಾನ ರಹಿತ, ಸ್ಥಳೀಯ ಸಂಸ್ಥೆಗಳ ಹಾಗೂ ದೂರ ಶಿಕ್ಷಣದಲ್ಲಿ ವ್ಯಾಸಂಗ ಮಾಡುತ್ತಿರುವ 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದ್ದು, ಈ ಕುರಿತು ಅರ್ಜಿ ಭರ್ತಿ ಮಾಡಲು ಕೆಎಸ್ಇಇಬಿ ವೆಬ್ಸೈಟ್ನಲ್ಲಿ ಮಾಹಿತಿ ನೀಡಲಾಗಿದೆ. ಈ ಬಗ್ಗೆ ಹೆಚ್ಚಿನ ವಿವರಗಳಿಗೆ ಶಾಲೆಗಳ ಮುಖ್ಯೋಪಾಧ್ಯಾಯರು ಕೆಎಸ್ಇಇಬಿ ವೆಬ್ಸೈಟ್ ವೆಬ್ಸೈಟ್ ಮೂಲಕ ಲಾಗಿನ್ ಆಗಿ ಎನ್ಟಿಎಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಚಿವರ ಪ್ರಕಟಣೆ ತಿಳಿಸಿದೆ.
ಸದ್ರಿ ಪರೀಕ್ಷೆಯು 2 ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಬೌದ್ಧಿಕ ಸಾಮರ್ಥ್ಯ ಮತ್ತು ಪ್ರಾಸಂಗಿಕ ಪ್ರವೃತ್ತಿ ಪರೀಕ್ಷೆಗಳು ನಡೆಯಲಿದ್ದು, ಕನ್ನಡ, ಇಂಗ್ಲಿಷ್, ಉರ್ದು ಮತ್ತು ಮರಾಠಿ ಮಾಧ್ಯಮಗಳಲ್ಲಿ ತೆಗೆದುಕೊಳ್ಳಬಹುದಾಗಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ನವೆಂಬರ್ 30ರೊಳಗೆ ಅರ್ಜಿ ಸಲ್ಲಿಸಬಹುದು.
ಮೊದಲ ಹಂತದ ಪರೀಕ್ಷೆ ನಂತರ ದ್ವಿತೀಯ ಹಂತದ ಪರೀಕ್ಷೆ ನಡೆಯಲಿದ್ದು, ದ್ವಿತೀಯ ಹಂತದ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪಿಯು ತರಗತಿಗಳ ಅಭ್ಯಾಸದ ಅವಧಿಯಲ್ಲಿ ಮಾಸಿಕ 1,200/- ರೂಪಾಯಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಹಂತದಲ್ಲಿ ಮಾಸಿಕ 2,000/- ರೂಪಾಯಿ ಹಾಗೂ ಉನ್ನತ ಶಿಕ್ಷಣದ ಹಂತದಲ್ಲಿ ಯುಜಿಸಿ ನಿಯಮಾನುಸಾರ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 080-23341615 ಗೆ ಸಂಪರ್ಕಿಸಬಹುದು. ಕಳೆದ ಬಾರಿ ಈ ಪರೀಕ್ಷೆಗೆ 1,23,101 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು ಎಂದು ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
Good
ReplyDelete