ನವದೆಹಲಿ (ಕರಾವಳಿ ಟೈಮ್ಸ್) : ಪಿಎಂ ಕೇರ್ಸ್ ಫಂಡಿಗೆ ಬರುವ ದೇಣಿಗೆ ಮೂಲ ಮತ್ತು ಅದನ್ನು ಯಾವ ಉದ್ದೇಶಗಳಿಗೆ ಬಳಕೆ ಮಾಡಲಾಗಿದೆ ಎಂಬ ವಿವರವನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲು ಸೂಚಿಸುವಂತೆ ಕೋರಿ ದೆಹಲಿ ಹೈಕೋರ್ಟಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದೆ.
ಡಾ. ಎಸ್.ಎಸ್ ಹೂಡಾ ಎಂಬವರು ಮಾಹಿತಿ ಹಕ್ಕು ಕಾಯ್ದೆಯಡಿ ಪಿಎಂ ಕೇರ್ಸ್ ಮಾಹಿತಿ ಕೋರಿ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ಬಳಿಕ ಇವರು ತಮ್ಮ ವಕೀಲ ಆದಿತ್ಯ ಹೂಡಾ ಮೂಲಕ ದೆಹಲಿ ಹೈಕೋರ್ಟಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಸರಕಾರಿ ಸ್ವಾಮ್ಯದ ಅಥವಾ ಸರಕಾರಿ ನಿಯಂತ್ರಿತ ಎಲ್ಲ ಹಣಕಾಸು ಸಂಸ್ಥೆಗಳು ಮಾಹಿತಿ ಹಕ್ಕಿನಡಿ ಬರಲಿದೆ. ಪಿಎಂ ಕೇರ್ಸ್ ಟ್ರಸ್ಟ್ಗೆ ಪ್ರಧಾನ ಮಂತ್ರಿಗಳು ಅಧ್ಯಕ್ಷರಾಗಿದ್ದು, ಹಣಕಾಸು ಸಚಿವರು, ರಕ್ಷಣಾ ಸಚಿವರು ಮತ್ತು ಗೃಹ ಸಚಿವರುಗಳು ಟ್ರಸ್ಟಿಗಳಾಗಿದ್ದಾರೆ. ಹೀಗಾಗಿ ಪಿಎಂ ಕೇರ್ಸ್ ಕೂಡಾ ಸರಕಾರದ ಹಣಕಾಸು ಸಂಸ್ಥೆಯಾಗಲಿದೆ. ಅಲ್ಲದೆ ಪಿಎಂ ಕೇರ್ಸ್ ಫಂಡಿಗೆ ಸಾರ್ವಜನಿಕ ವಲಯದ ಉದ್ಯಮ ಕ್ಷೇತ್ರಗಳಿಂದ ದೊಡ್ಡ ಮೊತ್ತದ ಹಣ ಹರಿದು ಬಂದಿದೆ. ಸಾರ್ವಜನಿಕರು ಹಣವನ್ನೂ ನೀಡಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಅಧಿಕಾರಿಗಳು ಒಂದು ದಿನದ ಸಂಬಳವನ್ನೂ ನೀಡಿದ್ದಾರೆ. ಪಿಎಂ ಕೇರ್ಸ್ ಈಗ ಸಾರ್ವಜನಿಕ ಪ್ರಾಧಿಕಾರವಾಗಲಿದೆ ಎಂದು ಹೈಕೋರ್ಟಿಗೆ ಸಲ್ಲಿಸಿದ ಅರ್ಜಿಯಲ್ಲಿ ಹೂಡಾ ತಿಳಿಸಿದ್ದಾರೆ.
ಪಿಎಂ ಕೇರ್ಸ್ ಸಾರ್ವಜನಿಕ ಪ್ರಾಧಿಕಾರವಲ್ಲ ಎಂದಾದರೆ ಇದಕ್ಕೆ ಹಣ ನೀಡುವಂತೆ ಸರಕಾರ ಜನರನ್ನು ಪ್ರೇರೇಪಿಸಬಹುದಾ ಎಂದು ಕೋರ್ಟ್ ಪರಿಶೀಲಿಸಬೇಕು. ಮಾಹಿತಿ ಹಕ್ಕು ಆರ್ಟಿಕಲ್ 19(1)(ಎ) ಸಾರ್ವಜನಿಕ ಪ್ರಾಧಿಕಾರವಲ್ಲದಿದ್ದರೂ ಜನರ ಹಣ ವ್ಯಯದ ಬಗ್ಗೆ ಮಾಹಿತಿ ನೀಡಬೇಕಾಗುತ್ತದೆ. ಇದನ್ನು ತಿಳಿದುಕೊಳ್ಳುವುದು ಜನರ ಮೂಲಭೂತ ಹಕ್ಕಾಗಿದೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.
ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಸಂದರ್ಭದಲ್ಲಿ ಪಿಎಂ ಕೇರ್ಸ್ ಫಂಡ್ ಯಾವುದಕ್ಕೆ ಹೇಗೆ ಬಳಕೆಯಾಗುತ್ತಿದೆ ಎನ್ನುವ ಮಾಹಿತಿಯನ್ನು ನೀಡಬೇಕು. ಈ ಮಾಹಿತಿ ನೀಡದಿರುವುದು ಅನುಮಾನಕ್ಕೆ ಕಾರಣವಾಗಿದೆ. ಕೊರೊನಾಗಾಗಿ ನಿಧಿ ಸ್ಥಾಪಿಸಿರುವಾಗ ಮಾಹಿತಿ ನೀಡಲು ಹಿಂಜರಿಕೆ ಯಾಕೆ ಹಾಗೂ ಇದರ ದುರ್ಬಳಕೆಯಾಗಿಲ್ಲ ಎನ್ನುವುದಾದರೆ ಮಾಹಿತಿ ನೀಡಲು ನಿರಾಕರಿಸುವುದು ಏಕೆ ಎಂದು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ಜೂನ್ 10ರ ಬಳಿಕ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಬರಲಿದೆ.
0 comments:
Post a Comment