ಬಂಟ್ವಾಳ, ಆಗಸ್ಟ್ 17, 2021 (ಕರಾವಳಿ ಟೈಮ್ಸ್) : ತಾಲೂಕಿನಲ್ಲಿ ಸದ್ಯ 277 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, 235 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ. 42 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಪ್ರಿಲ್ 1 ರಿಂದ ಇದುವರೆಗೆ ಒಟ್ಟು 82 ಮಂದಿ ಮೃತಪಟ್ಟಿದ್ದಾರೆ. ಕಳೆದ ಏಳು ದಿನಗಳಲ್ಲಿ ಪಾಸಿಟಿವಿಟಿ ರೇಟ್ 1.77 ಇದೆ. ಕಳೆದ ವಾರ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ ದೀಪಾ ಪ್ರಭು ಮಾಹಿತಿ ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅಂಗಾರ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಬಿ ಸಿ ರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕೋವಿಡ್ ಸಂಬಂಧಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು.
ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಅಧಿಕಾರಿಗಳು ಕೋವಿಡ್ ಸಂಬಂಧಿ ವಿಷಯಗಳಲ್ಲಿ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಅದು ಬಿಟ್ಟು ಇನ್ಯಾರೋ ಹೇಳಿದ ಬಗ್ಗೆ ಕೇಳಿ ಕುಳಿತಲ್ಲೇ ವರದಿ ತಯಾರಿಸುವುದನ್ನು ನಿಲ್ಲಿಸಬೇಕು ಎಂದು ತಾಕೀತು ಮಾಡಿದರು. ಪ್ರತಿ ಇಲಾಖಾಧಿಕಾರಿಗಳು ಪರಸ್ಪರ ಹೊಂದಾಣಿಕೆಯಿಂದ ಕೆಲಸ ನಿರ್ವಹಿಸುವ ಮೂಲಕ ಕೋರೋನಾ ನಿಯಂತ್ರಣಕ್ಕೆ ಶ್ರಮಿಸಬೇಕು ಎಂದು ಸಚಿವರು ಸೂಚಿಸಿದರು.
ಹೋಂ ಐಸೋಲೇಶನ್ನಿನಿಂದ ಸಮಸ್ಯೆಯಾಗುತ್ತಿದ್ದು, ಪಾಸಿಟಿವ್ ದೃಢಪಟ್ಟ ರೋಗಿಗಳನ್ನು ಅಧಿಕಾರಿಗಳು ಮನವೊಲಿಸಿ ಕೋವಿಡ್ ಕೇರ್ ಸೆಂಟರಿಗೆ ದಾಖಲಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ ಸಚಿವ ಅಂಗಾರ ಅಧಿಕಾರಿಗಳು ಸರಕಾರದ ಆದೇಶ ಪಾಲಿಸುವುದರ ಜೊತೆಗೆ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸವನ್ನೂ ಮಾಡಬೇಕು ಎಂದರು.
ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆವಿ, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ಪುರಸಭಾಧ್ಯಕ್ಷ ಶರೀಫ್, ಬುಡಾ ಅಧ್ಯಕ್ಷ ಬಿ ದೇವದಾಸ ಶೆಟ್ಟಿ, ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜ, ತಾಲೂಕು ಪಂಚಾಯತ್ ಇಒ ರಾಜಣ್ಣ, ತಹಶೀಲ್ದಾರ್ ರಶ್ಮಿ ಎಸ್ ಆರ್, ಶಿಕ್ಷಣಾಧಿಕಾರಿ ಜ್ಞಾನೇಶ್, ಶಿಶು ಅಭಿವೃದ್ದಿ ಅಧಿಕಾರಿ ಗಾಯತ್ರಿ ಕಂಬಳಿ ಸಹಿತ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
0 comments:
Post a Comment