ಮಂಗಳೂರು, ಮೇ 19, 2025 (ಕರಾವಳಿ ಟೈಮ್ಸ್) : ಮೇ 21 ರಿಂದ 23ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಿದೆ.
ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ ಕೆಲವೊಂದು ಕಟ್ಟೆಚ್ಚರ ಹಾಗೂ ತುರ್ತು ಕ್ರಮ ಘೋಷಿಸಿದೆ. ಈ ದಿನಗಳಲ್ಲಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪೋಷಕರು ತಡೆಯುವುದು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣೆ ಚಾಚೂ ತಪ್ಪದೆ ಪಾಲಿಸುವುದು, ಜಿಲ್ಲಾಡಳಿತ ವಿವಿಧ ಪ್ರದೇಶಗಳಿಗೆ ನೇಮಿಸಿದ ಇನ್ಸಿಡೆಂಟ್ ಕಮಾಂಡರುಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕರ ದೂರುಗಳಿಗೆ ಸ್ಪಂದಿಸುವುದು ಹಾಗೂ ಜಿಲ್ಲಾಡಳಿತ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು, ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕಾ ದೋಣಿಗಳು ತಕ್ಷಣ ದಡ ಸೇರುವುದು, ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖಾಧಿಕಾರಿಗಳು ಪ್ರತಿ ತಾಲೂಕು ಕೇಂದ್ರಗಳಲ್ಲಿ ಕಾಳಜಿ ಕೇಂದ್ರ ತೆರೆದು ಸನ್ನದ್ದ ಸ್ಥಿತಿಯಲ್ಲಿರಿಸಿಕೊಳ್ಳುವುದು ಇವೇ ಮೊದಲಾದ ಕಟ್ಟೆಚ್ಚರಗಳನ್ನು ಘೋಷಿಸಲಾಗಿದೆ.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ 1077 ಅಥವಾ 0824-2442590, ಮಂಗಳೂರು ಮಹಾನಗರ ಪಾಲಿಕೆ 0824-2220306/ 2220319, ಮಂಗಳೂರು ತಾಲೂಕು 0824-2220587, ಉಳ್ಳಾಲ ತಾಲೂಕು 0824-2204424, ಬಂಟ್ವಾಳ ತಾಲೂಕು 7337669102, ಪುತ್ತೂರು ತಾಲೂಕು 08251-230349, ಬೆಳ್ತಂಗಡಿ ತಾಲೂಕು 08256-232047, ಸುಳ್ಯ ತಾಲೂಕು 08257-231231, ಮೂಡಬಿದ್ರೆ ತಾಲೂಕು 08258-238100, ಕಡಬ ತಾಲೂಕು 08251-260435, ಮುಲ್ಕಿ ತಾಲೂಕು 0824-2294496 ಸಂಖ್ಯೆಗಳಿಗೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment