ಬೆಂಗಳೂರು, ಜೂನ್ 04, 2025 (ಕರಾವಳಿ ಟೈಮ್ಸ್) : ಬರೋಬ್ಬರಿ 18 ವರ್ಷಗಳ ಬಳಿಕ ಪ್ರಥಮ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದುಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ಬುಧವಾರ ಸಂಜೆ ಬೆಂಗಳೂರಿನಲ್ಲಿ ನಡೆದಿದ್ದು, ಸಂಭ್ರಮಾಚರಣೆಗೆ ಬಂದಿದ್ದ ಸುಮಾರು 10 ಮಂದಿ ಆರ್ ಸಿ ಬಿ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ ಜೀವ ಕಳೆದುಕೊಂಡಿದ್ದಾರೆ. ಮೃತರ ನಿಖರ ಸಂಖ್ಯೆ ಇನ್ನೂ ಗೊತ್ತಾಗದೆ ಇದ್ದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಟ್ರೋಫಿ ಗೆದ್ದ ತಮ್ಮ ನೆಚ್ಚಿನ ತಂಡದ ಆಟಗಾರರನ್ನು ಕಣ್ಣಾರೆ ಕಂಡು ಆನಂದಿಸಲು ವಿವಿಧೆಡೆಗಳಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಯುವಕ, ಯುವತಿಯರು ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಈ ವೇಳೆ ಉಂಟಾದ ತಳ್ಳಾಟ, ನೂಕುನುಗ್ಗಲಿನಿಂದ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಓರ್ವ ಮಗು, ಆರು ಪುರುಷರು, ಮೂರು ಮಹಿಳೆಯರು ಸೇರಿದಂತೆ 10 ಮಂದಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಬೌರಿಂಗ್ ಆಸ್ಪತ್ರೆಯಲ್ಲಿ ಆರು, ವೈದೇಹಿ ಆಸ್ಪತ್ರೆಯಲ್ಲಿ ನಾಲ್ವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. 16 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಉಸಿರಾಟದ ಸಮಸ್ಯೆಯಿಂದ ಟೆಕ್ಕಿ ಸಹನಾ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. 12 ಜನರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯೇಹಿ ಆಸ್ಪತ್ರೆ ವೈದ್ಯರಾದ ಡಾ ಉಮೇರಾ ತಿಳಿಸಿದ್ದಾರೆ.
ಕ್ರೀಡಾಂಗಣದ 18, 19, ಮತ್ತು 20ನೇ ಗೇಟ್ ಓಪನ್ ಆಗುತ್ತಿದ್ದಂತೆ ಅಭಿಮಾನಿಗಳು ಏಕಾಏಕಿ ಒಳನುಗ್ಗಿದ್ದು, ತಳ್ಳಾಟ, ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಒಬ್ಬರ ಮೇಲೆ ಮತ್ತೋರ್ವರು ಹತ್ತಲು ಪ್ರಯತ್ನಿಸಿದಾಗ ಕಾಲ್ತುಳಿತ ಉಂಟಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೆÇಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಆರ್ ಸಿ ಬಿ ಆಟಗಾರರು ಆಗಮಿಸುವ ಗೇಟ್ ನಂಬರ್ 12 ರ ಬಳಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದ ವೇಳೆ ಭಾರಿ ನೂಕು ನುಗ್ಗಲು ಉಂಟಾಗಿದೆ. ಈ ವೇಳೆ ಗಂಭೀರವಾಗಿ ಅಸ್ವಸ್ಥರಾಗಿದ್ದ ಮಹಿಳಾ ಅಭಿಮಾನಿಯನ್ನು ಕಾರಿನಲ್ಲಿ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ತನ್ನವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಗೇಟ್ ನಂಬರ್ 6 ರ ಬಳಿ ಯುವಕನೋರ್ವ ಗೇಟ್ ಹತ್ತಲು ಹೋಗಿ ಕಾಲು ಮುರಿದುಕೊಂಡಿರುವುದಾಗಿ ವರದಿಯಾಗಿದೆ. ಭಾರಿ ಜನ ಹಾಗೂ ವಾಹನ ದಟ್ಟಣೆಯಿಂದಾಗಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.
0 comments:
Post a Comment