ಬಂಟ್ವಾಳ, ಜೂನ್ 22, 2025 (ಕರಾವಳಿ ಟೈಮ್ಸ್) : ಇಲ್ಲಿನ ವಿದ್ಯಾಗಿರಿ ಎಸ್ ವಿ ಎಸ್ ವಿದ್ಯಾವರ್ಧಕ ಸಂಘದ ವತಿಯಿಂದ ಸಂಘದ ಸದಸ್ಯ ರಾಘವೇಂದ್ರ ಕೂಡಿಗೆ ಶೆಣೈ ಅವರು ತನ್ನ ತಾಯಿ ಸವಿತಾ ಪಾಂಡುರಂಗ ಶೆಣೈ ಅವರ ಸ್ಮರಣಾರ್ಥ ಎಸ್ ವಿ ಎಸ್ ಪದವಿ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮಧ್ಯಾಹ್ನದ ಉಚಿತ ಬಿಸಿಯೂಟ ಯೋಜನೆ-2025ಕ್ಕೆ ದೇಣಿಗೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್ ವಿ ಎಸ್ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕಿ ಕೆ ರೇಖಾ ಶೆಣೈ ಅವರು ಮಧ್ಯಾಹ್ನದ ಉಚಿತ ಬಿಸಿಯೂಟ ಯೋಜನೆ-2025ರ ಫಲಾನುಭವಿ ವಿದ್ಯಾರ್ಥಿಗಳಿಗೆ ಕಾರ್ಡ್ ವಿತರಿಸುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು.
ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಶಿವಣ್ಣ ಪ್ರಭು ಕೆ ಮಾತನಾಡಿ, ಸಮಾಜದ ವಿವಿಧ ನೆಲೆಗಳಿಂದ ವಿದ್ಯಾರ್ಥಿಗಳು ಶಿಕ್ಷಣವನ್ನರಸಿಕೊಂಡು ಶಿಕ್ಷಣ ಸಂಸ್ಥೆಗಳಿಗೆ ಬರುತ್ತಾರೆ. ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಾಣ ಮಾಡುವುದು ಶಿಕ್ಷಣ ಕೇಂದ್ರಗಳ ಜವಾಬ್ದಾರಿ. ಕಲಿಕೆಯಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಲು ವಿದ್ಯಾರ್ಥಿಗೆ ತಾನು ಕಲಿಯುವ ಪರಿಸರವೂ ಪರಿಣಾಮ ಬೀರುತ್ತದೆ. ಮನೆಯ ಪರಿಸರ, ಸ್ಥಿತಿ ಗತಿಗಳೂ ಸಹ ವಿದ್ಯಾರ್ಥಿಯ ಕಲಿಕೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದು. ಕಲಿಕೆಯಲ್ಲಿ ಮುಂದೆ ಇದ್ದರೂ ಎಷ್ಟೋ ಸಂದರ್ಭಗಳಲ್ಲಿ ವಿದ್ಯಾರ್ಥಿಗಳ ಕುಟುಂಬದ ಆರ್ಥಿಕ ಸ್ಥಿತಿಗತಿ ಶಿಕ್ಷಣವನ್ನು ಮುಂದುವರೆಸಲು ತೊಡಕಾಗಿ ಪರಿಣಮಿಸುತ್ತದೆ. ಈ ನಿಟ್ಟಿನಲ್ಲಿ ಕಾಲೇಜು ಆಡಳಿತ ಮಂಡಳಿಯು ಜ್ಞಾನದ ಹಸಿವನ್ನು ನೀಗಿಸುವ ಜತೆಯಲ್ಲಿ ವಿದ್ಯಾರ್ಥಿಗಳ ಆರ್ಥಿಕ ಪರಿಸ್ಥಿತಿಯನ್ನು ಅರಿತುಕೊಂಡು ಹೊಟ್ಟೆಯ ಹಸಿವನ್ನು ನೀಗಿಸುವ ಕೆಲಸ ಮಾಡಿರುವುದು ಅಭಿನಂದನೀಯ ಎಂದು ಶ್ಲಾಘಿಸಿದರು.
ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶಶಿಧರ್ ಎಸ್ ಫಲಾನುಭವಿ ವಿದ್ಯಾರ್ಥಿಗಳ ಹೆಸರು ವಾಚಿಸಿದರು. ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಸುದರ್ಶನ್ ಬಿ ಸ್ವಾಗತಿಸಿ, ಉಪ ಪ್ರಾಂಶುಪಾಲ ಲೆಪ್ಟಿನೆಂಟ್ ಪ್ರದೀಪ್ ಪೂಜಾರಿ ವಂದಿಸಿದರು. ಸಂಸ್ಕøತ ಉಪನ್ಯಾಸಕ ಗಣೇಶ್ ಕಾರ್ಯಕ್ರಮ ನಿರೂಪಿಸಿದರು.
0 comments:
Post a Comment