ಮಂಗಳೂರು, ನವೆಂಬರ್ 24, 2025 (ಕರಾವಳಿ ಟೈಮ್ಸ್) : ಮಾಧ್ಯಮಗಳು ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯಬೇಕು. ಸಮಾಜದಲ್ಲಿ ಮೌಢ್ಯವನ್ನು ಬಿತ್ತುವ ಕೆಲಸ ಮಾಡಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹೇಳಿದ್ದಾರೆ.
ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಮತ್ತು ಆಂತರಿಕ ಗುಣಮಟ್ಟ ಖಾತ್ರಿ ಕೋಶ ವಿಭಾಗದ ವತಿಯಿಂದ ನವೆಂಬರ್ 22 ರಂದು ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ ಕಾಲಘಟ್ಟದಲ್ಲಿ ಸುಳ್ಳು ಸುದ್ದಿ, ಊಹಾ ಪತ್ರಿಕೋದ್ಯಮ ವೇಗವಾಗಿ ಹರಡುತ್ತದೆ. ಈ ರೀತಿಯ ಪತ್ರಿಕೋದ್ಯಮ ಸಮಾಜದಲ್ಲಿ ವಿಭಜನೆ, ಅಭದ್ರತೆಗೆ ಕಾರಣವಾಗುತ್ತಿದೆ. ಮಾಧ್ಯಮಗಳು ಜನರು ಮತ್ತು ಸರಕಾರದ ನಡುವೆ ರಾಯಭಾರಿಗಳಂತೆ ಕಾರ್ಯನಿರ್ವಹಿಸಬೇಕಾಗಿದೆ. ದೇಶಕ್ಕೆ ಸ್ವಾತಂತ್ರ್ಯ ದೊರೆತ ಕಾಲದಲ್ಲಿ ಮುಂಚೂಣಿಯಲ್ಲಿದ್ದ ಅಭಿವೃದ್ಧಿ ಪತ್ರಿಕೋದ್ಯಮ ಕಳೆಗುಂದುತ್ತಿದೆ ಎಂದರು.
ಇಂದಿನ ಸುದ್ದಿ ಪ್ರಸಾರದ ಧಾವಂತದಲ್ಲಿ, ಡಿಜಿಟಲ್ ಮಾಧ್ಯಮಗಳ ಕಾಲಘಟ್ಟದಲ್ಲಿ ಪತ್ರಿಕೋದ್ಯಮದಲ್ಲಿ ವಿಶ್ವಾಸಾರ್ಹತೆಯನ್ನು ಉಳಿಸಿಕೊಳ್ಳುವುದೇ ಒಂದು ಸವಾಲಾಗಿದೆ. ಪತ್ರಕರ್ತರಿಗೆ ಸಮಾಜವನ್ನು ತಿದ್ದುವ ಅವಕಾಶವಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗವಾಗದಂತೆ ಪತ್ರಕರ್ತರು ಎಚ್ಚರ ವಹಿಸಬೇಕಾಗಿದೆ. 1966ರ ನವೆಂಬರ್ 16 ರಂದು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ರಚನೆಯಾದ ಹಿನ್ನೆಲೆಯಲ್ಲಿ ಆ ದಿನವನ್ನು ರಾಷ್ಟ್ರೀಯ ಪತ್ರಿಕಾ ದಿನವನ್ನಾಗಿ ಆಚರಿಸಲಾಗುತ್ತದೆ ಎಂದವರು ಹೇಳಿದರು.
ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಭವಿಷ್ಯದ ಮಾಧ್ಯಮಗಳು ಎಂಬ ವಿಷಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ಉಪನ್ಯಾಸ ನೀಡಿದರು.
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖಾ ಹಿರಿಯ ಸಹಾಯ ನಿರ್ದೇಶಕ ಖಾದರ್ ಶಾ, ಮಂಗಳೂರು ರೋಟರಿ ಸೆಂಟ್ರಲ್ ಘಟಕದ ಅಧ್ಯಕ್ಷ ಭಾಸ್ಕರ ರೈ ಕಟ್ಟ, ಕರ್ನಾಟಕ ಸೆಣಬು ನಿಗಮದ ಅಧ್ಯಕ್ಷ ನಟರಾಜ್, ರಾಜ್ಯ ಬಾಲಭವನ ಸಮಿತಿಯ ಅಧ್ಯಕ್ಷ ಬಿ.ಆರ್ ನಾಯ್ಡು ಭಾಗವಹಿಸಿದ್ದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿ, ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಸುರೇಶ್ ವಂದಿಸಿದರು.

















0 comments:
Post a Comment