ಮಂಗಳೂರು, ಜನವರಿ 20, 2026 (ಕರಾವಳಿ ಟೈಮ್ಸ್) : ಡ್ರಗ್ಸ್, ಗಾಂಜಾ ಮತ್ತಿತರ ಮಾದಕ ವಸ್ತುಗಳ ಡ್ರಗ್ಸ್ ಪೆಡ್ಲರುಗಳ ವಿರುದ್ಧ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಿ ಕೊನೆಯ ಪೆಡ್ಲರ್ ಬಂಧನವಾಗುವವರೆಗೂ ಮುಂದುವರಿಸಲಾಗುವುದು ಎಂದು ಪೆÇಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಡ್ರಗ್ಸ್, ಮಾದಕ ವಸ್ತುಗಳ ಜಾಗೃತಿ ಪ್ರಯುಕ್ತ ಪುರಭವನದಲ್ಲಿ ಜ 20 ರಂದು ನಡೆದ ವಿವಿಧ ಶಿಕ್ಷಣ ಸಂಸ್ಥೆಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡ್ರಗ್ಸ್ ವಿತರಣಾ ಜಾಲವನ್ನು ನಿಲ್ಲಿಸಲು ಪೊಲೀಸ್ ಇಲಾಖೆ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದೆ. ಇತ್ತೀಚೆಗೆ ನಡೆದ ವಿದ್ಯಾರ್ಥಿಗಳ ತಪಾಸಣೆಯಲ್ಲಿ ಯಾವುದೇ ಡ್ರಗ್ಸ್ ಪಾಸಿಟಿವ್ ಕಂಡು ಬಂದಿರುವುದಿಲ್ಲ. ಇದರಿಂದ ನಶಮುಕ್ತ ಮಂಗಳೂರು ಅಭಿಯಾನವು ಸಂಪೂರ್ಣ ಯಶಸ್ವಿಯಾಗುವ ವಿಶ್ವಾಸವಿದೆ ಎಂದರು.
ಎಲ್ಲಾ ಕಾಲೇಜುಗಳಲ್ಲಿ ಡ್ರಗ್ಸ್ ವಿರೋಧಿ ಸಮಿತಿ ಕ್ರಿಯಾಶೀಲಗೊಳಿಸಬೇಕು. ಮಾದಕ ವಸ್ತುಗಳ ಪ್ರಭಾವಕ್ಕೊಳಗಾದ ಸಂಶಯಾಸ್ಪದ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಕೌನ್ಸಿಲಿಂಗ್ ಮೂಲಕ ಹೊರ ತರಬೇಕು. ಈ ನಿಟ್ಟಿನಲ್ಲಿ ಅಗತ್ಯ ನೆರವನ್ನು ಪೊಲೀಸ್ ಇಲಾಖೆ ನೀಡಲಿದೆ ಎಂದ ಕಮಿಷನರ್ ರೆಡ್ಡಿ, ಶಿಕ್ಷಣ ಸಂಸ್ಥೆಗಳ ಕ್ಯಾಂಪಸನ್ನು ಶುದ್ಧಗೊಳಿಸುವ ಇಂತಹ ಚಟಗಳಿಂದ ಮುಕ್ತ ಮಾಡುವ ಈ ಅಭಿಯಾನದಲ್ಲಿ ಕಾಲೇಜುಗಳು ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ಪೆÇಲೀಸ್ ಅಧಿಕಾರಿಗಳು ಆಗಿಂದಾಗೆ ಭೇಟಿ ನೀಡಲಿದ್ದಾರೆ. ಡ್ರಗ್ಸ್ ಪ್ರಭಾವಿತ ವಿದ್ಯಾರ್ಥಿಗಳನ್ನು ಸಂತ್ರಸ್ತರೆಂದು ಪರಿಗಣಿಸಲಾಗುವುದು. ಆದರೆ ಡ್ರಗ್ಸ್ ಪೆಡ್ಲರುಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾರ್ಯಾಚರಣೆ ನಡೆಸಲಾಗುವುದು ಎಂದರು.
ಮಂಗಳೂರಿನಲ್ಲಿ ಡ್ರಗ್ಸ್ ವ್ಯಾಪಕವಾಗಿದೆ ಎಂದು ಕೇಳಿ ಬರುತ್ತಿದೆ. ಆದರೆ 2025 ಜೂನ್ 1ರಿಂದ 2026ರ ಜನವರಿ 17ರವರೆಗೆ ವಿವಿಧ ಕಾಲೇಜುಗಳಲ್ಲಿ 5356 ಡ್ರಗ್ಸ್ ಪರೀಕ್ಷೆಗಳನ್ನು ಮಾಡಲಾಗಿದ್ದು, ಇದರಲ್ಲಿ ಕೇವಲ 14 ಪ್ರಕರಣಗಳು ಕಂಡು ಬಂದಿದೆ. ಇದು ಜಿಲ್ಲೆಯಲ್ಲಿ ಡ್ರಗ್ಸ್ ಚಟುವಟಿಕೆ ಕಡಿಮೆಯಾಗಿರುವ ಸಂಕೇತವಾಗಿದೆ ಎಂದ ಸುಧೀರ್ ಕುಮಾರ್ ಪಾಲಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಬೇಕು ಎಂದು ಸೂಚಿಸಿದು.
ಪಿಜಿಗಳಿಗೆ ಪೊಲೀಸ್ ಎನ್.ಓ.ಸಿ
ನಗರದಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ) ಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಪಿಜಿಗಳಿಗೆ ಲೈಸೆನ್ಸ್ ನೀಡುವ ಮೊದಲು ಪೆÇಲೀಸ್ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆಯುವ ಬಗ್ಗೆ ಪರಿಶೀಲಿಸುವುದಾಗಿ ಪೆÇಲೀಸ್ ಕಮಿಷನರ್ ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಸಭಿಕರು, ಈ ಬಗ್ಗೆ ಪ್ರಸ್ತಾಪಿಸಿ ಪಿಜಿಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಯಾವುದೇ ನಿಯಮಗಳನ್ನು ಪಾಲಿಸುತ್ತಿಲ್ಲ. ಇವುಗಳಲ್ಲಿ ಡ್ರಗ್ಸ್ ಸೇವನೆಗೆ ಪೂರಕವಾಗಿ ಇರುತ್ತದೆ. ಪಿಜಿಗಳ ಕಾರ್ಯಾಚರಣೆ ಬಗ್ಗೆ ಪೊಲೀಸರಿಗೂ ಮಾಹಿತಿ ಇರುವುದಿಲ್ಲ ಎಂದು ಪೆÇಲೀಸ್ ಆಯುಕ್ತರ ಗಮನಕ್ಕೆ ತಂದರು.
ಇದಕ್ಕೆ ಸ್ಪಂದಿಸಿದ ಕಮಿಷನರ್, ಪಿಜಿ ಸ್ಥಾಪನೆಗೆ ನಗರ ಪಾಲಿಕೆ ಮತ್ತು ಸ್ಥಳೀಯ ಸಂಸ್ಥೆಗಳು ಲೈಸೆನ್ಸ್ ನೀಡುವ ಮೊದಲು ಪೆÇಲೀಸ್ ಇಲಾಖೆಯಿಂದ ನಿರಾಪೇಕ್ಷಣಾ ಪತ್ರ ಪಡೆಯುವ ಬಗ್ಗೆ ಕ್ರಮಕೈಗೊಳ್ಳಲು ಪರಿಶೀಲಿಸಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಎಸ್ಪಿ ಅರುಣ್ ಕುಮಾರ್, ಉಪ ಪೊಲೀಸ್ ಆಯುಕ್ತ ಮಿಥುನ್ ಎಚ್.ಎನ್, ಮಂಗಳೂರು ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಎಎಸ್ಪಿ ಅನಿಲ್ ಕುಮಾರ್ ಮೊದಲಾದವರು ಭಾಗವಹಿಸಿದ್ದರು.













0 comments:
Post a Comment