ಮಂಗಳೂರು, ಎಪ್ರಿಲ್ 14, 2026 (ಕರಾವಳಿ ಟೈಮ್ಸ್) : ಬಾಲ್ಯದಿಂದಲೇ ಸಮಸ್ಯೆಗಳನ್ನು ಎದುರಿಸುತ್ತಾ ಬಂದು, ಅದನ್ನೇ ಸವಾಲಾಗಿ ಸ್ವೀಕರಿಸಿದ ಧೀಮಂತ ವ್ಯಕ್ತಿ ಡಾ. ಬಿ ಆರ್ ಅಂಬೇಡ್ಕರ್ ಆಗಿದ್ದಾರೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.
ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಎಪ್ರಿಲ್ 14 ರಂದು ನಡೆದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಆಡಳಿತದ ನೀತಿ ನಿರೂಪಣೆಯಲ್ಲಿ ಮಹಿಳೆಯರು, ದುರ್ಬಲರು ಭಾಗವಹಿಸಬೇಕೆಂಬುದು ಅಂಬೇಡ್ಕರ್ ಕನಸಾಗಿತ್ತು. ಇದನ್ನು ಈಡೇರಿಸಲು ಕೇಂದ್ರ ಸರಕಾರ ಬದ್ಧವಾಗಿ ಅದನ್ನು ಈಡೇರಿಸಲು ಪಣ ತೊಟ್ಟಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮಾತನಾಡಿ, ಸಂವಿಧಾನದ ಆಶಯಗಳಂತೆ ಆಡಳಿತ ನಡೆಸಬೇಕಾಗಿದೆ. ಅಂಬೇಡ್ಕರ್ ಚಿಂತನೆಗಳನ್ನು ಎಲ್ಲರೂ ತಿಳಿದುಕೊಳ್ಳಲು ಸರಕಾರ ಕಾರ್ಯಕ್ರಮ ನಡೆಸುತ್ತಾ ಬಂದಿದೆ. ದೇಶದ ಪ್ರತಿ ವ್ಯಕ್ತಿಗೂ ಒಂದೇ ಮತದ ಹಕ್ಕು ನೀಡಿರುವುದು ಸಂವಿಧಾನದ ಸೊಗಸು ಆಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ನಗರದಲ್ಲಿ ಅಂಬೇಡ್ಕರ್ ವೃತ್ತ ನಿರ್ಮಾಣ ಕಾರ್ಯವನ್ನು ಶೀಘ್ರ ಕೈಗೆತ್ತಿಕೊಳ್ಳಬೇಕು ಎಂದು ಆಗ್ರಹಿಸಿದರು.
ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ಸಂವಿಧಾನ ಪೀಠಿಕೆ ಭೋದಿಸಿದರು. ಮಂಗಳೂರು ವಿ ವಿ ಉಪನ್ಯಾಸಕ ಮೋಹನ್ ಸಿಂಘೆ ಅವರು ಉಪನ್ಯಾಸ ನೀಡಿದರು. ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಮುಡಾ ಅಧ್ಯಕ್ಷ ಸದಾಶಿವ, ಪೆÇಲೀಸ್ ಆಯುಕ್ತ ಸುಧೀರ್ ರೆಡ್ಡಿ, ಪೆÇಲೀಸ್ ವರಿಷ್ಠಾಧಿಕಾರಿ ಡಾ. ಅರುಣ್, ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಭಾಗವಹಿಸಿದ್ದರು.
ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಉಪನಿರ್ದೇಶಕ ಸುರೇಶ್ ಅಡಿಗ ಸ್ವಾಗತಿಸಿ, ಬಿಸಿಎಂ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ್ ವಂದಿಸಿದರು. ಪ್ರದೀಪ್ ಕಾರ್ಯಕ್ರಮ ನಿರೂಪಿಸಿದರು.




















0 comments:
Post a Comment