ಮಂಗಳೂರು, ಮೇ 01, 2026 (ಕರಾವಳಿ ಟೈಮ್ಸ್) : ನಗರಗಳನ್ನು ಸ್ವಚ್ಛವಾಗಿಡುವ ಕೆಲಸವನ್ನು ಮಾಡಿ ಸಮಾಜದ ಜನರ ಆರೋಗ್ಯವನ್ನು ಕಾಪಾಡಿಕೊಂಡು ಬರುವ ಪೌರಕಾರ್ಮಿಕರ ಆರೋಗ್ಯವೂ ಕೂಡ ಉತ್ತಮವಾಗಿರಬೇಕು. ಪೌರ ಕಾರ್ಮಿಕರಿಗೆ ಉತ್ತಮವಾದ ಆರೋಗ್ಯ ವಿಮಾ ಪಾಲಿಸಿಯನ್ನು ವಿನ್ಯಾಸಗೊಳಿಸಲಾಗಿದೆ. ಸರಕಾರವು ಜಾರಿಗೆ ತಂದ ಆರೋಗ್ಯ ವಿಮೆ ಕಾರ್ಡ್ ಬಳಸಿಕೊಂಡು ಪೌರಕಾರ್ಮಿಕರು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ ಅಶೋಕ ಸಾಲಪ್ಪ ಹೇಳಿದರು.
ಎಪ್ರಿಲ್ 30 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ಮಂಗಳೂರು ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ನೇರಪಾವತಿ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ಹಾಗೂ ಆರೋಗ್ಯ ವಿಮೆ ಕಾರ್ಡ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪೌರಕಾರ್ಮಿಕರು ನೈರ್ಮಲ್ಯದ ಕೆಲಸ ಮಾಡುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ. ಪೌರಕಾರ್ಮಿಕರು ಅನಾರೋಗಕ್ಕೀಡಾದಾಗ ಆಸ್ಪತ್ರೆಯಲ್ಲಿ ಹೆಚ್ಚು ಹಣ ವ್ಯಯ ಮಾಡಬಾರದು ಎಂಬ ಕಾರಣದಿಂದ ಸರಕಾರವು ನಗದುರಹಿತ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತಂದಿದ್ದು, ಎಲ್ಲಾ ಪೌರಕಾರ್ಮಿಕರು ಇದನ್ನು ಬಳಕೆ ಮಾಡಿಕೊಳ್ಳಬೇಕು. ಆರೋಗ್ಯ ವಿಮೆ ಯೋಜನೆಯಡಿ ಪೌರಕಾರ್ಮಿಕರಿಗೆ 5 ಲಕ್ಷದವರೆಗೆ ಯಾವುದೇ ಆಸ್ಪತ್ರೆಯಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು ಎಂದರು. ಪೌರ ಕಾರ್ಮಿಕರು ಅಗತ್ಯವಾದ ಸುರಕ್ಷತಾ ಸಾಧನಗಳನ್ನು ಬಳಸಿಕೊಂಡು ಕಾರ್ಯನಿರ್ವಹಿಸಬೇಕು. ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದವರು ಹೇಳಿದರು.
ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮಾತನಾಡಿ, ಪೌರ ಕಾರ್ಮಿಕರ ಆರೋಗ್ಯ ಹದಗೆಟ್ಟರೆ ಮಂಗಳೂರು ನಗರದ ನೈರ್ಮಲ್ಯೀಕರಣ ಕುಂಠಿತಗೊಳ್ಳುತ್ತದೆ. ಅಸುರಕ್ಷಿತ ಪರಿಸರದಲ್ಲಿ ಕೆಲಸ ನಿರ್ವಹಿಸುತ್ತಿರುವುದರಿಂದ ಅನಾರೋಗ್ಯ ಉಲ್ಬಣಗೊಳ್ಳುತ್ತದೆ. ಆದ್ದರಿಂದ ಪೌರ ಕಾರ್ಮಿಕರು ದುಶ್ಚಟಗಳಿಗೆ ಬಲಿಯಾಗದೆ ತಮ್ಮ ವೈಯಕ್ತಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದ ಅವರು ಪೌರ ಕಾರ್ಮಿಕರಿಗೆ ನೀಡಿರುವ ಕಾರ್ಡನ್ನು ಸ್ಕ್ಯಾನ್ ಮಾಡಿದರೆ ಕಾರ್ಮಿಕರಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳು ಲಭ್ಯವಾಗುತ್ತವೆ. ಇಂತಹ ವಿಮಾ ಯೋಜನೆಗಳನ್ನು ನಗರದ ವಿವಿಧ ಕಾಪೆರ್Çರೇಟ್ ಕಂಪ£ಗಳು ನೌಕರರಿಗೆ £ೀಡುತ್ತಿದ್ದು, ಈಗ ಪೌರ ಕಾರ್ಮಿಕರಿಗೂ ಈ ಆರೋಗ್ಯ ವಿಮೆ ಯೋಜನೆಯನ್ನು ಒದಗಿಸಲಾಗಿದ್ದು, ಇದರ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ನೇರ ಪಾವತಿ ಪೌರ ಕಾರ್ಮಿಕರಿಗೆ ಆರೋಗ್ಯ ವಿಮೆ ಕಾರ್ಡ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿ. ಕುಮಾರ್, ವಿಮಾ ಸಂಸ್ಥೆಯ ಸಂಯೋಜಕ ಟಿ.ಎಲ್ ಕೃಷ್ಣಮೂರ್ತಿ, ನಿಗಮದ ಹೆಲ್ತ್ ಇನ್ಸೂರೆನ್ಸ್ ಕನ್ಸಲ್ಟೆಂಟ್ ಡಾ. ಜಯಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
ಮಹಾನಗರಪಾಲಿಕೆ ಪರಿಸರ ಇಂಜಿನಿಯರ್ ದೀಪ್ತಿ ಸ್ವಾಗತಿಸಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಡಾ. ಮನೀಶ್ ನಾಯಕ್ ವಂದಿಸಿದರು. ನವನೀತ್ ಕಾರ್ಯಕ್ರಮ ನಿರೂಪಿಸಿದರು.













0 comments:
Post a Comment