ಮಂಗಳೂರು, ಎಪ್ರಿಲ್ 07, 2026 (ಕರಾವಳಿ ಟೈಮ್ಸ್) : ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ವಿಧಾನಸಭಾ ಸ್ಪೀಕರ್ ಡಾ ಯು ಟಿ ಖಾದರ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಪ್ರಿಲ್ 6 ರಂದು ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಕುಡಿಯುವ ನೀರಿನ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಗ್ರಾಮ ಪಂಚಾಯತ್ಗಳು, ನಗರ ಸ್ಥಳೀಯ ಸಂಸ್ಥೆಗಳು, ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಒತ್ತು ನೀಡಬೇಕು. ಯಾವುದೇ ಅಡೆತಡೆ ಇಲ್ಲದೆ ನೀರು ಪೂರೈಸಲು ಗಮನ ಹರಿಸಬೇಕು. ಸ್ಥಳೀಯವಾದ ಸಮಸ್ಯೆಗಳನ್ನು ತಮ್ಮ ಹಂತದಲ್ಲಿ ಪರಿಹರಿಸಿ ಗ್ರಾಮ ಪಂಚಾಯತ್ ಗಳು ಮತ್ತು ಸ್ಥಳೀಯ ಸಂಸ್ಥೆಗಳ ಅನುದಾನ ಬಳಸಿಕೊಂಡು ಕಾಮಗಾರಿ ನಡೆಸಬೇಕು. ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದವರು ತಿಳಿಸಿದರು.
ಜಲಜೀವನ್ ಯೋಜನೆಯಲ್ಲಿ ಎಲ್ಲ ಮನೆಗಳಿಗೆ ಸಂಪರ್ಕ ಒದಗಿಸಬೇಕು. ಈ ಯೋಜನೆಯಡಿ ನಿರ್ಮಿಸಲಾಗಿರುವ ಟ್ಯಾಂಕ್ ಗಳಿಗೆ ಸಂಬಂಧಪಟ್ಟ ನೀರಿನ ಮೂಲಗಳಿಂದ ನೀರು ತಲುಪಿಸಿ ಜನ ವಸತಿ ಪ್ರದೇಶಗಳಿಗೆ ನಿರಂತರ ನೀರು ಪೂರೈಕೆಯಾಗಲು ಗಮನಹರಿಸಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು ಎಂದು ಖಾದರ್ ಸೂಚಿಸಿದರು.
ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ವಿಳಂಬ ಮಾಡಬಾರದು. ಪೈಪ್ ಅಳವಡಿಕೆಗೆ ರಸ್ತೆ ಅಗೆದಿರುವ ಕಡೆಗಳಲ್ಲಿ ವಿಳಂಬವಿಲ್ಲದೆ ರಸ್ತೆಯನ್ನು ಪುನಃಸ್ಥಾಪನೆ ಮಾಡಬೇಕು. ಕುಡಿಯುವ ನೀರಿಗೆ ಸಂಬಂಧಿಸಿದ ಇಲಾಖೆಗಳು ನಿಗಮಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸ್ಪೀಕರ್ ತಿಳಿಸಿದರು.
ಜಲಜೀವನ್ ಮಿಷನ್ ಯೋಜನೆಯಡಿ ನೀರಿನ ಸಂಪರ್ಕ ಒದಗಿಸದ ಎಲ್ಲಾ ಮನೆಗಳಿಗೆ ನೀರಿನ ಮೀಟರ್ ಅಳವಡಿಸಬೇಕು. ಮೀಟರ್ ಅಳವಡಿಸಲು ಬಾಕಿ ಇರುವ ಮನೆಗಳ ಸಮರ್ಪಕ ಮಾಹಿತಿಯನ್ನು ಪಡೆದು ಕ್ರೋಢೀಕರಿಸಿ ಸರಕಾರಕ್ಕೆ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲು ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ ಮಾತನಾಡಿ, ಕುಡಿಯುವ ನೀರಿನ ಯೋಜನೆಗಳ ಕಾಮಗಾರಿ ಸಂಪೂರ್ಣಗೊಂಡ ನಂತರವೇ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಬೇಕು. ಕಾಮಗಾರಿ ಪೂರ್ಣಗೊಳ್ಳದೆ ಹತ್ತಾಂತರಕ್ಕೆ ಒತ್ತಡ ಹೇರುವಂತಿಲ್ಲ. ಸಂಬಂಧಿಸಿದ ಗುತ್ತಿಗೆದಾರರೇ ಒಂದು ವರ್ಷದವರೆಗೆ ಕಾಮಗಾರಿ ನಿರ್ವಹಣೆ ಮಾಡಬೇಕಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಉಳ್ಳಾಲ ತಾಲೂಕಿನ ಗ್ರಾಮೀಣ ಪ್ರದೇಶ ಹಾಗೂ ಕೋಟೆಕಾರ್, ಸೋಮೇಶ್ವರ ಉಳ್ಳಾಲ ಪಟ್ಟಣಗಳ ಕುಡಿಯುವ ನೀರಿನ ಪರಿಸ್ಥಿತಿಯನ್ನು ಸ್ಪೀಕರ್ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಡಾ. ಜಿ. ಸಂತೋಷ್ ಕುಮಾರ್ ಭಾಗವಹಿಸಿದ್ದರು.


















0 comments:
Post a Comment