ಬಂಟ್ವಾಳ, ಮೇ 18, 2026 (ಕರಾವಳಿ ಟೈಮ್ಸ್) : ಅಮ್ಟಾಡಿ ಗ್ರಾಮದ ಏರ್ಕುಲ ಪ್ರದೇಶದಲ್ಲಿ ಪರವಾನಿಗೆ ರಹಿತವಾಗಿ ಕಾರ್ಯಾಚರಿಸುತ್ತಿರುವ ಹಂದಿ ಸಾಕಾಣಿಕೆ ಕೇಂದ್ರದ ವಿರುದ್ಧವನ್ನು ತೆರವುಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಸಾರ್ವಜನಿಕ ದೂರಿನ ಹಿನ್ನಲೆಯಲ್ಲಿ ಸೋಮವಾರ ಬೆಳಿಗ್ಗೆ ಅಮ್ಟಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಂದಿ ಸಾಕಾಣಿಕೆ ಕೇಂದ್ರದಿಂದ ನಿರಂತರ ಗಬ್ಬು ವಾಸನೆ ಹರಡುತ್ತಿದ್ದು, ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಇದರಿಂದ ಮಕ್ಕಳ ಹಾಗೂ ಹಿರಿಯ ನಾಗರಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ಗಬ್ಬು ವಾಸನೆ ಕಾರಣ ಈ ಭಾಗದಲ್ಲಿ ಶುಭ ಸಮಾರಂಭಗಳನ್ನು ನಡೆಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎನ್ನುವ ಸ್ಥಳೀಯ ನಾಗರಿಕರು, ತೆರೆದ ವಾಹನಗಳಲ್ಲಿ ತ್ಯಾಜ್ಯಗಳನ್ನು ಹಂದಿ ಸಾಕಾಣಿಕೆ ಕೇಂದ್ರಕ್ಕೆ ಸಾಗಿಸಲಾಗುತ್ತಿದ್ದು, ಪರಿಸರ ಮತ್ತಷ್ಟು ಮಲಿನಗೊಳ್ಳುತ್ತಿದೆ. ಅಲ್ಲದೆ ಸಮೀಪದಲ್ಲೇ ಸರಕಾರಿ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರ ಕಾರ್ಯನಿರ್ವಹಿಸುತ್ತಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದಿದ್ದಾರೆ.
ಪರವಾನಿಗೆ ಇಲ್ಲದೆ ಕಾನೂನು ಬಾಹಿರವಾಗಿ ನಡೆಯುತ್ತಿರುವ ಈ ಹಂದಿ ಸಾಕಾಣಿಕೆ ಕೇಂದ್ರವನ್ನು ಕೂಡಲೇ ತೆರವುಗೊಳಿಸಿ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು. ಸಾರ್ವಜನಿಕರ ದೂರಿಗೆ ಪ್ರತಿಕ್ರಿಯಿಸಿದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಸ್ಥರ ಅಹವಾಲುಗಳನ್ನು ದಾಖಲಿಸಿಕೊಂಡಿದ್ದು, ಕೂಡಲೇ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು. ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.











0 comments:
Post a Comment