ಬಂಟ್ವಾಳ, ಜೂನ್ 30, 2026 (ಕರಾವಳಿ ಟೈಮ್ಸ್) : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗ ಯೋಜನೆಯಿಂದ ಕೃಷಿ ಭೂಮಿಯನ್ನು ಕಳೆದುಕೊಂಡು ಇನ್ನೂ ಪರಿಹಾರಕ್ಕಾಗಿ ಕಾಯುತ್ತಿರುವ ರೈತರ ಸಮಸ್ಯೆಗಳ ಕುರಿತು ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಅವರು ತಮ್ಮ ಬಿ ಸಿ ರೋಡು ಕಚೇರಿಯಲ್ಲಿ ಸಂತ್ರಸ್ತ ರೈತರು ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಿ, ಬಾಕಿ ಉಳಿದಿರುವ ಪರಿಹಾರವನ್ನು ತ್ವರಿತವಾಗಿ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಉಡುಪಿ ಜಿಲ್ಲೆಯಿಂದ ಕಾಸರಗೋಡು ಜಿಲ್ಲೆಗೆ ಸಂಪರ್ಕ ಕಲ್ಪಿಸುವ 400 ಕೆವಿ ವಿದ್ಯುತ್ ಪ್ರಸರಣ ಮಾರ್ಗವು ಬಂಟ್ವಾಳ ತಾಲೂಕಿನ ಹಲವು ಗ್ರಾಮಗಳ ಮೂಲಕ ಹಾದುಹೋಗಿದ್ದು, ಯೋಜನೆಗಾಗಿ ನೂರಾರು ರೈತರ ಕೃಷಿ ಭೂಮಿಯನ್ನು ಬಳಸಿಕೊಳ್ಳಲಾಗಿದೆ. ಯೋಜನೆಯಡಿ ಬಹುತೇಕ ಅರ್ಹ ಫಲಾನುಭವಿಗಳಿಗೆ ಪರಿಹಾರ ವಿತರಿಸಲಾಗಿದ್ದರೂ, ಕೆಲ ಪ್ರಕರಣಗಳಲ್ಲಿ ಜಮೀನಿನ ದಾಖಲೆಗಳ ವ್ಯತ್ಯಾಸ, ತಾಂತ್ರಿಕ ಅಡಚಣೆಗಳು ಹಾಗೂ ಆಡಳಿತಾತ್ಮಕ ಪ್ರಕ್ರಿಯೆಗಳ ಕಾರಣದಿಂದ ಇನ್ನೂ ಪರಿಹಾರ ಬಿಡುಗಡೆಯಾಗದೆ ಬಾಕಿ ಉಳಿದಿದೆ ಎಂದು ರೈತರು ಶಾಸಕರ ಗಮನಕ್ಕೆ ತಂದರು.
ಸಭೆಯಲ್ಲಿ ಮಾತನಾಡಿದ ರೈತರು, ತಮ್ಮ ಕೃಷಿ ಭೂಮಿಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಯೋಜನೆಗೆ ನೀಡಿದ್ದರೂ, ದೀರ್ಘ ಕಾಲದಿಂದ ಪರಿಹಾರ ದೊರೆಯದೆ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವುದಾಗಿ ತಿಳಿಸಿದರು. ಕೆಲವು ಕುಟುಂಬಗಳು ಸಂಪೂರ್ಣವಾಗಿ ಕೃಷಿಯನ್ನೇ ಅವಲಂಬಿಸಿದ್ದು, ಭೂಮಿ ಕಳೆದುಕೊಂಡ ನಂತರ ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಬೀರಿದೆ. ಹೀಗಾಗಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ವಿಳಂಬವಿಲ್ಲದೆ ಇತ್ಯರ್ಥಪಡಿಸಿ, ಸರ್ಕಾರದ ನಿಯಮಾನುಸಾರ ಪರಿಹಾರವನ್ನು ಶೀಘ್ರದಲ್ಲಿ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.
ರೈತರ ಅಹವಾಲುಗಳನ್ನು ಆಲಿಸಿದ ಶಾಸಕ ರಾಜೇಶ್ ನಾಯ್ಕ್ ಅವರು, ಸಾರ್ವಜನಿಕ ಅಭಿವೃದ್ಧಿ ಯೋಜನೆಗಳು ಅಗತ್ಯವಾದರೂ, ಅದರ ಹೆಸರಿನಲ್ಲಿ ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗಬಾರದು ಎಂದು ಹೇಳಿದರು. ಪರಿಹಾರ ವಿತರಣೆಯಲ್ಲಿ ಎದುರಾಗಿರುವ ಪ್ರತಿಯೊಂದು ತಾಂತ್ರಿಕ ಹಾಗೂ ದಾಖಲೆ ಸಂಬಂಧಿತ ಸಮಸ್ಯೆಯನ್ನು ಅಧಿಕಾರಿಗಳು ವೈಯಕ್ತಿಕವಾಗಿ ಪರಿಶೀಲಿಸಿ, ಕಾನೂನು ಹಾಗೂ ಸರ್ಕಾರದ ನಿಯಮಾವಳಿಗಳ ವ್ಯಾಪ್ತಿಯಲ್ಲಿ ಶೀಘ್ರವಾಗಿ ಇತ್ಯರ್ಥಪಡಿಸುವಂತೆ ಸೂಚನೆ ನೀಡಿದರು.
ಈಗಾಗಲೇ ಬಾಕಿ ಉಳಿದಿರುವ ಪ್ರತಿಯೊಂದು ಪ್ರಕರಣದ ಪ್ರಗತಿಯನ್ನು ಪರಿಶೀಲಿಸಿ, ಸಂಬಂಧಪಟ್ಟ ಇಲಾಖೆ ಮತ್ತು ಯೋಜನಾ ಅಧಿಕಾರಿಗಳ ನಡುವೆ ಸಮನ್ವಯ ಸಾಧಿಸುವ ಮೂಲಕ ಪರಿಹಾರ ವಿತರಣೆಯ ಪ್ರಕ್ರಿಯೆಯನ್ನು ವೇಗಗೊಳಿಸಬೇಕು. ಅರ್ಹ ರೈತರಿಗೆ ಯಾವುದೇ ಅನಗತ್ಯ ವಿಳಂಬವಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಸಭೆಯಲ್ಲಿ ತಾಲೂಕು ತಹಶೀಲ್ದಾರ್ ಮಂಜುನಾಥ್, ಕಂದಾಯ ನಿರೀಕ್ಷಕ ಜನಾರ್ದನ, ಯೋಜನೆಯ ಪ್ರಾಜೆಕ್ಟ್ ಹೆಡ್ ವೆಂಕಟೇಶ್ ಪೂಜಾರಿ, ಮ್ಯಾನೇಜರ್ ಗಳಾದ ಅಭಿಷೇಕ್ ಹಾಗೂ ಆಗ್ನಲ್ ಗೊಂಝಾಲ್ವೆಸ್, ಸಹಾಯಕ ವ್ಯವಸ್ಥಾಪಕರಾದ ರೋಹಿತ್ ಮತ್ತು ಸಚಿನ್, ಅಧಿಕಾರಿ ಝೇರಾಮ್ ಸೇರಿದಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ರೈತರು ಪ್ರಸ್ತಾಪಿಸಿದ ಪ್ರತಿಯೊಂದು ಪ್ರಕರಣವನ್ನು ಪರಿಶೀಲಿಸಿ ಶೀಘ್ರದಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸಭೆಯಲ್ಲಿ ವಿವಿಧ ಗ್ರಾಮಗಳ ಸಂತ್ರಸ್ತ ರೈತರು ಭಾಗವಹಿಸಿ ತಮ್ಮ ಸಮಸ್ಯೆಗಳು ಹಾಗೂ ದಾಖಲೆಗಳಿಗೆ ಸಂಬಂಧಿಸಿದ ಅಡಚಣೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.


















0 comments:
Post a Comment