ಮಂಗಳೂರು, ಜೂನ್ 23, 2026 (ಕರಾವಳಿ ಟೈಮ್ಸ್) : ಮಂಗಳೂರು ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನವು ಕೇವಲ ಮುಸ್ಲಿಂ ಸಮುದಾಯಕ್ಕಷ್ಟೇ ಅಲ್ಲ, ಇಡೀ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿ’ಸೋಜಾ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಖಾಝಿಗಳ ನಿಧನದ ಪ್ರಯುಕ್ತ ಅಂತಿಮ ದರ್ಶನ ಪಡೆದ ಅವರು, ಸರ್ವಧರ್ಮ ಸಮಭಾವ, ಶಾಂತಿ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳ ಪ್ರತೀಕವಾಗಿದ್ದ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ತಮ್ಮ ಪ್ರವಚನಗಳು ಹಾಗೂ ಮಾರ್ಗದರ್ಶನದ ಮೂಲಕ ಸಮಾಜದಲ್ಲಿ ಸೌಹಾರ್ದತೆಯನ್ನು ಬೆಳೆಸುವ ಮಹತ್ತರ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದ್ದರು. ಪ್ರತಿಯೊಂದು ಹಬ್ಬದ ಸಂದರ್ಭದಲ್ಲಿಯೂ ಅವರನ್ನು ಭೇಟಿಯಾಗುವ ಅವಕಾಶ ನನಗೆ ದೊರೆಯುತ್ತಿತ್ತು. ಅವರ ಸಂದೇಶಗಳಲ್ಲಿ ಎಲ್ಲರೂ ಶಾಂತಿ ಮತ್ತು ನೆಮ್ಮದಿಯಿಂದ ಬದುಕಬೇಕು, ಪರಸ್ಪರ ಗೌರವ ಹಾಗೂ ಪ್ರೀತಿಯಿಂದ ವರ್ತಿಸಬೇಕು ಎಂಬ ಮೌಲ್ಯಗಳಿಗೆ ವಿಶೇಷ ಸ್ಥಾನವಿತ್ತು.
ಇತ್ತೀಚೆಗೆ ರಂಜಾನ್ ಹಾಗೂ ಬಕ್ರೀದ್ ಹಬ್ಬದ ಸಂದರ್ಭದಲ್ಲಿಯೂ ಅವರನ್ನು ಭೇಟಿಯಾಗಿ ಶುಭಾಶಯ ಕೋರಿದ್ದೆ. ಆದರೆ ಅವರು ಇಷ್ಟು ಬೇಗ ನಮ್ಮನ್ನಗಲುತ್ತಾರೆ ಎಂದು ಊಹಿಸಿರಲಿಲ್ಲ. ಅವರ ಮಾರ್ಗದರ್ಶನ, ತತ್ವಗಳು ಮತ್ತು ಆದರ್ಶಗಳು ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲದೆ ಎಲ್ಲ ಸಮುದಾಯಗಳ ಜನರಿಗೂ ಪ್ರೇರಣೆಯಾಗಿದ್ದವು. ಅವರ ಅಗಲಿಕೆಯಿಂದ ಉಂಟಾದ ಶೂನ್ಯವನ್ನು ತುಂಬುವುದು ಕಷ್ಟಸಾಧ್ಯ. ಪರಮಾತ್ಮನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬದ ಸದಸ್ಯರು, ಬಂಧುಬಳಗ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದವರು ತಮ್ಮ ಸಂತಾಪ ಸೂಚಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.














0 comments:
Post a Comment