ಮಂಗಳೂರು, ಜೂನ್ 17, 2026 (ಕರಾವಳಿ ಟೈಮ್ಸ್) : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳ ಸಂಬಂಧಪಟ್ಟ ದಾಖಲೆಗಳನ್ನು ಪಡೆದು ತ್ವರಿತವಾಗಿ ಪರಿಹಾರಧನವನ್ನು ಮಂಜೂರು ಮಾಡಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜೂನ್ 16 ರಂದು ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಾಸ್ಟೆಲ್ಗಳಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ ಅಥವಾ ಯಾವುದೇ ಪೆÇಕ್ಸೋ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಿಸಿದ ಇಲಾಖೆಗಳು ಗಂಭೀರವಾಗಿ ಪರಿಗಣಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.
ಎಲ್ಲ ಇಲಾಖೆಗಳು ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕಾರ್ಯಕ್ರಮಗಳ ಗುರಿಯನ್ನು ಕಾಲಮಿತಿಯೊಳಗೆ ತಲುಪಬೇಕು ಮತ್ತು ಫಲಾನುಭವಿಗಳಿಗೆ ಅಗತ್ಯ ನೆರವು ಒದಗಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯಡಿ ನಿಗದಿಪಡಿಸಿದ ಅನುದಾನವನ್ನು ಯಾವುದೇ ಕಾರಣಕ್ಕೂ ಮುಂದೂಡದೆ ಆಯಾ ವರ್ಷದಲ್ಲಿಯೇ ಖರ್ಚು ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ 2025ರ ಜನವರಿ 1ರಿಂದ ಡಿಸೆಂಬರ್ 31 ರವರೆಗೆ 69 ಪ್ರಕರಣಗಳು ದಾಖಲಾಗಿದ್ದು, 5 ಪ್ರಕರಣಗಳಿಗೆ ಮಾತ್ರ ಪರಿಹಾರ ಮಂಜೂರು ಮಾಡಲು ಬಾಕಿ ಇದ್ದು, 3 ಪ್ರಕರಣಗಳ ದಾಖಲೆಗಳು ಸ್ವೀಕೃತಗೊಂಡಿದೆ. ಪರಿಹಾರ ಧನ ಮಂಜೂರು ಮಾಡಲು ಕ್ರಮ ವಹಿಸಲಾಗಿದೆ. ಇನ್ನುಳಿದ 2 ಪ್ರಕರಣಗಳಲ್ಲಿ ದಾಖಲೆಗಳು ಬರಲು ಬಾಕಿ ಇರುತ್ತದೆ. ಜನವರಿ 2026ರಿಂದ ಜೂನ್ 10ರವರೆಗೆ 25 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, 21 ಪ್ರಕರಣಗಳಿಗೆ ಪರಿಹಾರ ಧನ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಹೇಮಲತಾ ಸಭೆಗೆ ಮಾಹಿತಿ ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಎಸ್ಪಿ ಡಾ. ಅರುಣ್ ಕೆ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.















0 comments:
Post a Comment