ಘನ ತ್ಯಾಜ್ಯ ನಿರ್ವಹಣಾ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ - Karavali Times ಘನ ತ್ಯಾಜ್ಯ ನಿರ್ವಹಣಾ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ - Karavali Times

728x90

23 June 2026

ಘನ ತ್ಯಾಜ್ಯ ನಿರ್ವಹಣಾ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು, ಜೂನ್ 23, 2026 (ಕರಾವಳಿ ಟೈಮ್ಸ್) : ಎಲ್ಲಾ ಸ್ಥಳೀಯ ಸಂಸ್ಥೆಗಳು ಘನ ತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಕಾಲಬದ್ಧ ಕ್ರಿಯಾ ಯೋಜನೆಯನ್ನು ರೂಪಿಸಿ ಅನುಸರಿಸಬೇಕು. ಮನೆ-ಮನೆ ಕಸ ಸಂಗ್ರಹಣೆ ಮತ್ತು ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಶೇ. 100ರಷ್ಟು ಗುರಿ ಸಾಧಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ನಿರ್ದೇಶಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜೂನ್ 23 ರಂದು ನಡೆದ ಘನ ತ್ಯಾಜ್ಯ ನಿರ್ವಹಣಾ ನಿಯಮಗಳು-2026ರ ಅನುಷ್ಠಾನದ ಪ್ರಗತಿ ಪರಿಶೀಲನೆ ಹಾಗೂ ಜಿಲ್ಲೆಯ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಘನ ತ್ಯಾಜ್ಯ ನಿರ್ವಹಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ನಡೆದ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳು ಸಾರ್ವಜನಿಕರಲ್ಲಿ ತ್ಯಾಜ್ಯ ವಿಂಗಡಣೆ ಮತ್ತು ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ನಗರ ಪ್ರದೇಶಗಳಲ್ಲಿ ಘನ ತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ ಅಗತ್ಯ ಭೂಮಿಯನ್ನು ಗುರುತಿಸಿ ಅಭಿವೃದ್ಧಿಪಡಿಸುವುದು ಹಾಗೂ ಬಲ್ಕ್ ವೇಸ್ಟ್ ಜನರೇಟರ್ ಗಳ ಮಾಹಿತಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಸಂಗ್ರಹವಾಗಿರುವ ಲೆಗಸಿ ವೇಸ್ಟ್ ವೈಜ್ಞಾನಿಕ ನಿರ್ವಹಣೆ ಮತ್ತು ವಿಲೇವಾರಿಗಾಗಿ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿ ಬಾಕಿ ಇರುವ ಲೆಗಸಿ ತ್ಯಾಜ್ಯದ ವಿಲೇವಾರಿಯನ್ನು ತ್ವರಿತಗೊಳಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ್ ಕಾರ್ಬಾರಿ ಮಾತನಾಡಿ,  ಗ್ರಾಮ ಪಂಚಾಯತ್ ಗಳಲ್ಲಿ ಘನ ತ್ಯಾಜ್ಯ ನಿರ್ವಹಣಾ ನಿಯಮಗಳು-2026 ಅನ್ನು ಕಟ್ಟುನಿಟ್ಟಾಗಿ ಮತ್ತು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಿದರು. ಗ್ರಾಮ ಪಂಚಾಯತ್ ಗಳು ತಮ್ಮ ವ್ಯಾಪ್ತಿಯಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ, ಸಾರ್ವಜನಿಕರಲ್ಲಿ ಸ್ವಚ್ಛತೆ ಮತ್ತು ತ್ಯಾಜ್ಯ ವಿಂಗಡಣೆ ಕುರಿತು ನಿರಂತರ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಡಾ. ಸಂತೋಷ್ ಕುಮಾರ್, ಘನ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು. ತ್ಯಾಜ್ಯ ಸಂಗ್ರಹಣೆ, ಸಾಗಣೆ, ಸಂಸ್ಕರಣೆ ಹಾಗೂ ವಿಲೇವಾರಿಯ ಪ್ರತಿಯೊಂದು ಹಂತದಲ್ಲಿಯೂ ನಿಯಮಗಳ ಪಾಲನೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು. 

ಘನ ತ್ಯಾಜ್ಯ ನಿರ್ವಹಣಾ ಘಟಕಗಳ ಪರಿಣಾಮಕಾರಿ ನಿರ್ವಹಣೆ, ಲೆಗಸಿ ತ್ಯಾಜ್ಯದ ತ್ವರಿತ ವಿಲೇವಾರಿ, ಬಲ್ಕ್ ವೇಸ್ಟ್ ಜನರೇಟರ್ ಗಳ ನೋಂದಣಿ ಮತ್ತು ಮೇಲ್ವಿಚಾರಣೆ, ಸ್ವಚ್ಛತಾ ಸಿಬ್ಬಂದಿಗೆ ಅಗತ್ಯ ಸುರಕ್ಷತಾ ಸಾಧನಗಳ ಒದಗಿಕೆ ಹಾಗೂ ನಿಯಮಿತ ಪ್ರಗತಿ ವರದಿಗಳ ಸಲ್ಲಿಕೆ ಕುರಿತು ಅಗತ್ಯ ನಿರ್ದೇಶನಗಳನ್ನು ನೀಡಿದರು. ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳು ನಿಗದಿತ ಗುರಿಗಳನ್ನು ಕಾಲಮಿತಿಯೊಳಗೆ ಸಾಧಿಸುವಂತೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದವರು ತಿಳಿಸಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಘನ ತ್ಯಾಜ್ಯ ನಿರ್ವಹಣಾ ನಿಯಮಗಳು-2026ರ ಪ್ರಮುಖ ಅಂಶಗಳು, ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಗಳು ಹಾಗೂ ನಿಯಮಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ವಿವರವಾಗಿ ಮಾಹಿತಿ ನೀಡಿದರು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಜಲ ಕಾಯ್ದೆ ಮತ್ತು ವಾಯು ಕಾಯ್ದೆ ಹಾಗೂ ಘನ ತ್ಯಾಜ್ಯ ನಿರ್ವಹಣಾ ನಿಯಮಗಳು-2026 ರನ್ವಯ ಪಡೆಯಬೇಕಾದ ಸಮ್ಮತಿ ಪತ್ರಗಳನ್ನು ಸ್ಥಳೀಯ ಸಂಸ್ಥೆಗಳು ಪಡೆದುಕೊಳ್ಳುವಂತೆ ಸಭೆಯಲ್ಲಿ ತಿಳಿಸಿದರು. 

ಸಭೆಯಲ್ಲಿ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಇಲಾಖೆ, ಶಿಕ್ಷಣ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು, ತಾಲೂಕು ಪಂಚಾಯತ್, ಪರಿಸರ ತಜ್ಞರು ಹಾಗೂ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಪರಿಸರ ಅಧಿಕಾರಿ ಹಾಗೂ ಸಮಿತಿಯ ಸದಸ್ಯ ಕಾರ್ಯದರ್ಶಿ ಡಾ. ಮಂಜು ಆರ್. ವಂದಿಸಿದರು. ಘನ ತ್ಯಾಜ್ಯಗಳ 4 ರೀತಿಯ ವಿಂಗಡಣೆ ಕುರಿತು ಜಾಗೃತಿ ಮೂಡಿಸುವ ಪೆÇೀಸ್ಟರ್ ಗಳನ್ನು ಇದೇ ವೇಳೆ ಬಿಡುಗಡೆಗೊಳಿಸಲಾಯಿತು.

  • Blogger Comments
  • Facebook Comments

0 comments:

Post a Comment

Item Reviewed: ಘನ ತ್ಯಾಜ್ಯ ನಿರ್ವಹಣಾ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ Rating: 5 Reviewed By: karavali Times
Scroll to Top