ಬಂಟ್ವಾಳ, ಜುಲೈ 29, 2026 (ಕರಾವಳಿ ಟೈಮ್ಸ್) : ತಾಲೂಕಿನ ಅಮ್ಮುಂಜೆ ನಿವಾಸಿ ವೃದ್ದೆ ಬೆನಡಿಕ್ಟ್ ಕಾರ್ಲೋ (73) ಎಂಬವರನ್ನು 2021 ರಲ್ಲಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಮಂಗಳೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ವೃದ್ದೆ ಬೆನಡಿಕ್ಟ್ ಅವರನ್ನು ಆರೈಕೆ ಮಾಡುತ್ತಿದ್ದ ಆರೋಪಿತೆ ಅಮ್ಟಾಡಿ ನಿವಾಸಿ ಕು ಏಲ್ಮಾ ಪ್ರೆಶ್ಚಿತ್ ಬರೆಟ್ಟೋ (23) ಎಂಬಾಕೆಯು, ವೃದ್ದೆಯ ಬಳಿಯಿದ್ದ ಚಿನ್ನಾಭರಣಗಳನ್ನು ಸುಲಿಗೆ ಮಾಡುವ ಉದ್ದೇಶದಿಂದ, ತನ್ನ ಸ್ನೇಹಿತ ನರಿಕೊಂಬು ನಿವಾಸಿ ಸತೀಶ ನಾಯಕ್ (28) ಎಂಬಾತನ ಸಹಾಯದಿಂದ ವೃದ್ದೆ ಸೇವಿಸುವ ಆಹಾರದಲ್ಲಿ ವಿಷ ಬೆರೆಸಿ ಕೊಲ್ಲಲು ಯತ್ನಿಸಿ, ಅದರಲ್ಲಿ ಸಫಲರಾಗದಿದ್ದಾಗ ಮತ್ತೋರ್ವ ಆರೋಪಿ ನರಿಕೊಂಬು ನಿವಾಸಿ ಚರಣ್ ಕುಮಾರ್ (31) ಎಂಬಾತನ ಸಹಾಯದಿಂದ 2021 ರ ಜನವರಿ 25 ರಂದು ರಾತ್ರಿ ಬೆನಡಿಕ್ಟ್ ಕಾರ್ಲೋ ಅವರನ್ನು ಉಸಿರುಗಟ್ಟಿಸಿ ಕೊಲೆಗೈದು ಅಂದಿನ ಅಂದಾಜು 3 ಲಕ್ಷ ರೂಪಾಯಿ ಮೌಲ್ಯದ ಒಟ್ಟು 61.070 ಗ್ರಾಂ ತೂಕದ ಚಿನ್ನಾಭರಣಗಳನ್ನು ಸುಲಿಗೆ ಮಾಡಿ, ಸಾಕ್ಷಿ ನಾಶಪಡಿಸಿದ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಪರಾಧ ಕ್ರಮಾಂಕ 22/2021, ಕಲಂ 302, 392, 120 (ಬಿ), 201 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಅಂದಿನ ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್ಸೈ ಆಗಿದ್ದ ಪ್ರಸನ್ನ ಎಂ ಎಸ್ ಅವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಅಂದಿನ ಬಂಟ್ವಾಳ ಪೆÇಲೀಸ್ ಇನ್ಸ್ ಪೆಕ್ಟರ್ ಆಗಿದ್ದ ಟಿ ಡಿ ನಾಗರಾಜ್ ಅವರು ತನಿಖೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ, ಸದ್ರಿ ಮೂವರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರು ಜಿಲ್ಲಾ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿದ್ದು, ಜುಲೈ 28 ರಂದು ನ್ಯಾಯಾಧೀಶ ಜಗದೀಶ್ ವಿ ಎನ್ ಅವರು ಪ್ರಕರಣದ ಮೂವರೂ ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸರಕಾರಿ ಅಭಿಯೋಜಕಿ ಶ್ರೀಮತಿ ಜ್ಯೋತಿ ಪ್ರಮೋದ್ ನಾಯಕ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದಾರೆ.













0 comments:
Post a Comment