ಬಂಟ್ವಾಳ, ಜುಲೈ 31, 2026 (ಕರಾವಳಿ ಟೈಮ್ಸ್) : ರಾಹುಲ್ ಗಾಂಧಿ, ಗಾಂಧಿ ಕುಟುಂಬ ಹಾಗೂ ನೀಟ್ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳ ಬಗ್ಗೆ ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಲ್ಲದೆ ಕೋಮು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿರುವ ಉಡುಪಿ ವಿಧಾನಸಭಾ ಶಾಸಕ ಯಶ್ಪಾಲ್ ಸುವರ್ಣ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಜುಲೈ 31 ರಂದು ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ದೂರು ನೀಡಲಾಯಿತು.
ಜುಲೈ 28 ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿ ನಗರ ಬಸ್ ನಿಲ್ದಾಣ ಸಮೀಪ ನಡೆದ ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ರಾಹುಲ್ ಗಾಂಧಿ, ಗಾಂಧಿ ಕುಟುಂಬದ ವಿರುದ್ದ ಸುಳ್ಳು ಪ್ರಚಾರ ಮಾಡಿದ್ದಲ್ಲದೆ ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ. ಪ್ರಚೋದನಕಾರಿ ಭಾಷಣ ಮಾಡಿ ಬಿಜೆಪಿ ಕಾರ್ಯಕರ್ತರನ್ನು ಗಲಭೆಗೆ ಪ್ರಚೋದನೆ ನೀಡಿದ್ದಾರೆ. ಧರ್ಮಗಳ ನಡುವೆ ಅಶಾಂತಿ ಉಂಟು ಮಾಡುವ ರೀತಿಯಲ್ಲಿ ಭಾಷಣ ಮಾಡಿರುತ್ತಾರೆ. ಸಾಮಾಜಿಕ ಸೌಹಾರ್ದತೆಗೆ ಭಂಗ ತರುವ ರೀತಿಯಲ್ಲಿ ನಡೆದುಕೊಂಡಿರುವ ಶಾಸಕ ಸುವರ್ಣ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಸಪಲ್ಯ ಬೋಳಂತೂರು, ಪಾಣೆಮಂಗಳೂರು ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಎ ಬಿ ಅಬ್ದುಲ್ಲಾ ಸಾಲೆತ್ತೂರು, ಬಂಟ್ವಾಳ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಲಾದ್ರು ಮಿನೇಜಸ್, ಬಂಟ್ವಾಳ ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಸಿರಾಜ್ ಮದಕ, ಕೆಡಿಸಿ ಸದಸ್ಯ ಮುಹಮ್ಮದ್ ನಂದಾವರ, ಸಿದ್ದೀಕ್ ಸರವು, ಮುಹಮ್ಮದ್ ಮಂಚಿ, ಗಣೇಶ್ ಶೆಟ್ಟಿ ಗೋಳ್ತಮಜಲು ಮೊದಲಾದವರು ನಿಯೋಗದಲ್ಲಿದ್ದರು.
ದೂರು ಸ್ವೀಕರಿಸಿರುವ ಬಂಟ್ವಾಳ ನಗರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.












0 comments:
Post a Comment