ಎಸ್.ಐ.ಆರ್. ಪ್ರಕ್ರಿಯೆ ಪ್ರಗತಿ ಬಗ್ಗೆ ಸಭೆ ನಡೆಸಿ ಕಾರ್ಯಕರ್ತರಿಗೆ ಚುರುಕು ಮುಟ್ಟಿಸಿದ ಶಾಸಕ ರಾಜೇಶ್ ನಾಯಕ್ - Karavali Times ಎಸ್.ಐ.ಆರ್. ಪ್ರಕ್ರಿಯೆ ಪ್ರಗತಿ ಬಗ್ಗೆ ಸಭೆ ನಡೆಸಿ ಕಾರ್ಯಕರ್ತರಿಗೆ ಚುರುಕು ಮುಟ್ಟಿಸಿದ ಶಾಸಕ ರಾಜೇಶ್ ನಾಯಕ್ - Karavali Times

728x90

24 July 2026

ಎಸ್.ಐ.ಆರ್. ಪ್ರಕ್ರಿಯೆ ಪ್ರಗತಿ ಬಗ್ಗೆ ಸಭೆ ನಡೆಸಿ ಕಾರ್ಯಕರ್ತರಿಗೆ ಚುರುಕು ಮುಟ್ಟಿಸಿದ ಶಾಸಕ ರಾಜೇಶ್ ನಾಯಕ್

 ಬಂಟ್ವಾಳ, ಜುಲೈ 24, 2026 (ಕರಾವಳಿ ಟೈಮ್ಸ್) : ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐ ಆರ್) ಪ್ರಕ್ರಿಯೆಯ ಪ್ರಗತಿ ಕುರಿತು ಮಹತ್ವದ ಸಭೆಯು ಬಿ ಸಿ ರೋಡಿನ ಬಿಜೆಪಿ ಕಚೇರಿಯಲ್ಲಿ ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ನೇತೃತ್ವದಲ್ಲಿ ನಡೆಯಿತು.

ಸಭೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಸ್ ಐ ಆರ್ ಪ್ರಕ್ರಿಯೆಯ ಪ್ರಗತಿ, ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳ ಸ್ಥಿತಿಗತಿ, ಬಾಕಿ ಉಳಿದಿರುವ ಅರ್ಜಿಗಳ ಮಾಹಿತಿ ಹಾಗೂ ಆನ್ ಲೈನ್ ಅಪ್ ಲೋಡ್ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸುವ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಮತದಾರರ ಪಟ್ಟಿಯು ಶೇ 100ರಷ್ಟು ನಿಖರ ಹಾಗೂ ಸಮಗ್ರವಾಗಿರುವಂತೆ ಕಾರ್ಯಕರ್ತರು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕರು ಸೂಚಿಸಿದರು.

ಈ ವೇಳೆ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಅವರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವ ಅತ್ಯಂತ ಮಹತ್ವದ ಕಾರ್ಯವಾಗಿದೆ. ಯಾವುದೇ ಅರ್ಹ ಮತದಾರರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಹಾಗೂ ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪದೋಷಗಳು ಕಂಡುಬರದಂತೆ ಪ್ರತಿಯೊಬ್ಬ ಕಾರ್ಯಕರ್ತರೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಕ್ಷೇತ್ರದಾದ್ಯಂತ ನಡೆಯುತ್ತಿರುವ ಎಸ್ ಐ ಆರ್ ಕಾರ್ಯವನ್ನು ಇನ್ನಷ್ಟು ವೇಗಗೊಳಿಸಲು ಮಂಡಲ, ಶಕ್ತಿ ಕೇಂದ್ರ ಹಾಗೂ ಬೂತ್ ಮಟ್ಟದಲ್ಲಿ ಸಮನ್ವಯ ಸಾಧಿಸಿ, ಬಾಕಿ ಇರುವ ಅರ್ಜಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು. ಈಗಾಗಲೇ ಸ್ವೀಕೃತಗೊಂಡಿರುವ ಅರ್ಜಿಗಳನ್ನು ತ್ವರಿತವಾಗಿ ಆನ್ ಲೈನಿಗೆ ಅಪ್ ಲೋಡ್ ಮಾಡುವ ಮೂಲಕ ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈತಪ್ಪದಂತೆ ಎಚ್ಚರಿಕೆ ವಹಿಸಬೇಕು ಎಂದರು. 

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗಿ ಪರಿಗಣಿಸದೆ, ಪ್ರತಿಯೊಬ್ಬ ಅರ್ಹ ಮತದಾರರ ಬಳಿಗೆ ತಲುಪುವ ಜನಜಾಗೃತಿ ಅಭಿಯಾನವಾಗಿ ರೂಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ತಮ್ಮ ಜವಾಬ್ದಾರಿಯನ್ನು ಅರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಶಾಸಕರು ಕರೆ ನೀಡಿದರು.

ಸಭೆಯಲ್ಲಿ ವಿವಿಧ ಗ್ರಾಮಗಳ ಎಸ್ ಐ ಆರ್ ಕಾರ್ಯದ ಪ್ರಗತಿಯ ಕುರಿತು ಪ್ರತ್ಯೇಕವಾಗಿ ಪರಿಶೀಲನೆ ನಡೆಸಲಾಯಿತು. ಕಾರ್ಯಕರ್ತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವುಗಳಿಗೆ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಕುರಿತು ಚರ್ಚಿಸಿ ಅಗತ್ಯ ಮಾರ್ಗದರ್ಶನ ನೀಡಲಾಯಿತು. ಎಸ್ ಐ ಆರ್ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಲು ಎಲ್ಲ ಹಂತಗಳಲ್ಲಿಯೂ ಸಮನ್ವಯತೆ ಹಾಗೂ ಸಂಘಟಿತ ಕಾರ್ಯಾಚರಣೆಗೆ ಆದ್ಯತೆ ನೀಡುವ ಸಂಕಲ್ಪವನ್ನು ವ್ಯಕ್ತಪಡಿಸಲಾಯಿತು.

ಸಭೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು ಹಾಗೂ ಬಂಟ್ವಾಳದ ಪ್ರಭಾರಿ ರಾಕೇಶ್ ರೈ ಕಡೆಂಜಿ, ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ಚೆನ್ನಪ್ಪ ಕೊಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜ ಹಾಗೂ ಶಿವಪ್ರಸಾದ್ ಶೆಟ್ಟಿ ಕರೋಪಾಡಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದೇವಪ್ಪ ಪೂಜಾರಿ, ಪ್ರಮುಖರಾದ ಬಿ ದೇವದಾಸ್ ಶೆಟ್ಟಿ, ಹರಿಕೃಷ್ಣ ಬಂಟ್ವಾಳ, ರಾಮದಾಸ್ ಬಂಟ್ವಾಳ, ಮಾಧವ ಮಾವೆ, ಸುಲೋಚನಾ ಜಿ ಕೆ ಭಟ್ ಸಹಿತ ಪಕ್ಷದ ವಿವಿಧ ಪದಾಧಿಕಾರಿಗಳು, ಶಕ್ತಿ ಕೇಂದ್ರದ ಪ್ರಮುಖರು, ಬೂತ್ ಮಟ್ಟದ ಜವಾಬ್ದಾರರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಎಸ್.ಐ.ಆರ್. ಪ್ರಕ್ರಿಯೆ ಪ್ರಗತಿ ಬಗ್ಗೆ ಸಭೆ ನಡೆಸಿ ಕಾರ್ಯಕರ್ತರಿಗೆ ಚುರುಕು ಮುಟ್ಟಿಸಿದ ಶಾಸಕ ರಾಜೇಶ್ ನಾಯಕ್ Rating: 5 Reviewed By: karavali Times
Scroll to Top