ಮಂಗಳೂರು, ಜುಲೈ 01, 2026 (ಕರಾವಳಿ ಟೈಮ್ಸ್) : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗುತ್ತಿದೆ. ವಿಶೇಷ ಸಮಗ್ರ ಪರಿಷ್ಕರಣೆಯ ಉದ್ದೇಶವು ಎಲ್ಲಾ ಅರ್ಹ ನಾಗರೀಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದಾಗಿದೆ.
ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಪರಿಶೀಲಿಸಿ ಹಾಗೂ ಖಚಿತ ಪಡಿಸಿಕೊಳ್ಳಬೇಕು. ಹೊಸ ಹೆಸರುಗಳ ಸೇರ್ಪಡೆ ಮಾಡಿ, ಗೈರು ಮತದಾರರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ಮೃತ ಮತದಾರರು ಹಾಗೂ ಒಂದಕ್ಕಿಂತ ಹೆಚ್ಚು ಮತಗಟ್ಟೆಗಳಲ್ಲಿ ಮತದಾರರಾಗಿ ನೋಂದಣಿಯಾಗಿರುವ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟು ಪರಿಷ್ಕರಣೆ ಮಾಡಲಾಗುತ್ತದೆ. ಗುರುತಿನ ಚೀಟಿಯಲ್ಲಿ ಏನಾದರೂ ದೋಷಗಳು ಇದ್ದಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಲು ಕೂಡಾ ಅವಕಾಶವಿದೆ. ಈ ಪ್ರಯುಕ್ತ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಜುಲೈ 29ರವರೆಗೆ ತಮ್ಮ ಮನೆಗೆ ಆಗಮಿಸಿ ಗಣತಿ ನಮೂನೆಯನ್ನು ನೀಡುತ್ತಾರೆ. ಆದ್ದರಿಂದ ಮಂಗಳೂರು ತಾಲೂಕಿನ ಎಲ್ಲಾ ಮತದಾರರು ಗಣತಿ ನಮೂನೆಯನ್ನು ಸ್ವೀಕರಿಸಿದ ನಂತರ ಭರ್ತಿ ಮಾಡಿ ಮತಗಟ್ಟೆ ಅಧಿಕಾರಿಗಳಿಗೆ ನೀಡಬೇಕು.
ಗಣತಿ ನಮೂನೆಯನ್ನು ಭರ್ತಿ ಮಾಡಿ ನೀಡದೇ ಹೋದಲ್ಲಿ ಮತದಾರರ ಕರಡು ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗುವುದಿಲ್ಲ. ಆದ್ದರಿಂದ ಎಲ್ಲಾ ಮತದಾರರು ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸದೇ ಮತದಾರರ ಪಟ್ಟಿಯಲ್ಲಿ ಹೆಸರು ಉಳಿಯಲು ಮತಗಟ್ಟೆ ಅಧಿಕಾರಿಗಳಿಗೆ ಸಹಕರಿಸಬೇಕು ಎಂದು ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ಮಂಗಳೂರು ತಾಲೂಕು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















0 comments:
Post a Comment