ಬಂಟ್ವಾಳ, ಆಗಸ್ಟ್ 31, 2026 ( ಕರಾವಳಿ ಟೈಮ್ಸ್) : ಅಟೋ ರಿಕ್ಷಾ ಡಿಕ್ಕಿ ಹೊಡೆದು ಬೈಕ್ ಸವಾರ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಸಜಿಪಮುನ್ನೂರು ಗ್ರಾಮದ ಮಾರ್ನಬೈಲು ಸಮೀಪದ ಕಂದೂರು- ಪೆಲತ್ತಕಟ್ಟೆ ಎಂಬಲ್ಲಿ ಆಗಸ್ಟ್ 30 ರಂದು ಭಾನುವಾರ ರಾತ್ರಿ ಸಂಭವಿಸಿದೆ.
ಮೃತ ಯುವಕನನ್ನು ನಂದಾವರ-ಸುನ್ನೀ ನಗರ ನಿವಾಸಿ ಮುಹಮ್ಮದ್ ರಶೀಕ್ (25) ಎಂದು ಹೆಸರಿಸಲಾಗಿದೆ.
ಅವಿವಾಹಿತನಾಗಿರುವ ರಾಶಿಕ್ ನಂದಾವರ ಶಾಲಾ ಸಮೀಪ ಗ್ಯಾರೇಜ್ ನಡೆಸುತ್ತಿದ್ದ. ಈತ ಭಾನುವಾರ ರಾತ್ರಿ ಸಜಿಪಕ್ಕೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಪೆಲತ್ತಕಟ್ಟೆಯಲ್ಲಿ ಅಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ತಕ್ಷಣ ಸ್ಥಳೀಯರು ಆತನನ್ನು ದೇರಳಕಟ್ಟೆ ಕಣಚೂರು ಆಸ್ಪತ್ರೆಗೆ ಸಾಗಿಸಿದರಾದರೂ ತಲೆಗೆ ಗಂಭೀರ ಗಾಯಗೊಂಡಿದ್ದ ಆತ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳೀಯವಾಗಿ ಎಲ್ಲರೊಂದಿಗೂ ಉತ್ತಮ ಒಡನಾಟ ಹೊಂದಿದ್ದ ಯುವಕನಾಗಿದ್ದ ರಶೀಕ್ ಅವರ ಅಕಾಲಿಕ ನಿಧನ ಇಡೀ ನಂದಾವರ ಊರನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ ಎಂದು ಸ್ಥಳೀಯರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಮೃತ ರಶೀಕ್ ತಂದೆ, ತಾಯಿ, ಸಹೋದರ-ಸಹೋದರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.






















0 comments:
Post a Comment