ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮ : ಮಕ್ಕಳಿಗೆ ಮಾತ್ರೆ ವಿತರಣೆ - Karavali Times ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮ : ಮಕ್ಕಳಿಗೆ ಮಾತ್ರೆ ವಿತರಣೆ - Karavali Times

728x90

7 August 2026

ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮ : ಮಕ್ಕಳಿಗೆ ಮಾತ್ರೆ ವಿತರಣೆ

ಮಂಗಳೂರು, ಆಗಸ್ಟ್ 07, 2026 (ಕರಾವಳಿ ಟೈಮ್ಸ್) : ಇಂದಿನ ಮಕ್ಕಳು ಭವಿಷ್ಯದಲ್ಲಿ ಗುಣಮಟ್ಟದ ಜೀವನ ನಡೆಸಲು ಉತ್ತಮ ಶಿಕ್ಷಣ ಲಭಿಸಬೇಕಾಗಿದ್ದು, ಇದಕ್ಕಾಗಿ ಪೌಷ್ಠಿಕಯುಕ್ತವಾದ ಸುಧಾರಿತ ಆರೋಗ್ಯ ಹೊಂದಿರಬೇಕಾಗಿರುತ್ತದೆ. ಈ ಹಿನ್ನಲೆಯಲ್ಲಿ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆಯನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 

ಜಂತು ಹುಳಗಳು ಮನುಷ್ಯನ ಕರುಳಿನಿಂದ ಆಹಾರವನ್ನು ಪಡೆದು ಜೀವಿಸುವಂತಹ ಉಪಜೀವಿಗಳಾಗಿವೆ. ಆಗಸ್ಟ್ 10 ರಂದು ಜಂತುಹುಳ ನಿವಾರಣಾ ದಿನವಾಗಿ ಆಚರಿಸಲಾಗುತ್ತದೆ. 1 ರಿಂದ 19 ವರ್ಷದೊಳಗಿನ ಮಕ್ಕಳಲ್ಲಿ ಜಂತು ಹುಳ ಕಾಣಿಸಿಕೊಳ್ಳುತ್ತಿರುವುದರಿಂದ 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಜಂತು ಹುಳ ಮಾತ್ರೆ ನೀಡಲಾಗುತ್ತದೆ. ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ/ ಕಾಲೇಜುಗಳಲ್ಲಿ ಹಾಗೂ ಅಂಗನವಾಡಿಗಳಲ್ಲಿ 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಜಂತು ಹುಳ ನಿವಾರಣಾ ಮಾತ್ರೆಯನ್ನು ಉಚಿತವಾಗಿ ನೀಡಲಾಗುತ್ತದೆ. 

ಜಂತು ಹುಳ ಮಾತ್ರೆ ಪಡೆಯದೆ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 17 ರ ಮಾಪ್ ಅಪ್ ದಿನದಂದು ಮಾತ್ರೆ ನೀಡಲಾಗುತ್ತದೆ. ಅಂಗನವಾಡಿಗೆ ದಾಖಲಾಗದ ಮಕ್ಕಳು ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಆಶಾ ಕಾರ್ಯಕರ್ತೆ/ ಅಂಗನವಾಡಿ ಕಾರ್ಯಕರ್ತೆ/ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಮೂಲಕ ಕಡ್ಡಾಯವಾಗಿ ಜಂತು ಹುಳ ಮಾತ್ರೆಯನ್ನು ನೀಡಲಾಗುತ್ತದೆ. 

ಇದು ಚೀಪುವ ಮಾತ್ರೆಯಾಗಿದ್ದು, ಈ ಮಾತ್ರೆಯನ್ನು ಮಧ್ಯಾಹ್ನ ಊಟದ ನಂತರ ಶಾಲೆಗಳಲ್ಲಿ ಶಾಲಾ ಶಿಕ್ಷಕರ ಮತ್ತು ಅಂಗನವಾಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯವರ ಉಪಸ್ಥಿತಿಯಲ್ಲಿ ನೀಡಲಾಗುತ್ತದೆ. 1 ವರ್ಷದಿಂದ 2 ವರ್ಷದೊಳಗಿನ ಮಕ್ಕಳಿಗೆ ಅರ್ಧ ಮಾತ್ರೆ, 2 ರಿಂದ 19 ವರ್ಷದೊಳಗಿನ ಮಕ್ಕಳಿಗೆ 1 ಮಾತ್ರೆಯನ್ನು ನೀಡಲಾಗುತ್ತದೆ.

ಜಂತುಹುಳ ಹರಡಲು ಸಾಧ್ಯತೆಗಳಿರುವ ಸಮುದಾಯದಲ್ಲಿ ಸಾಮಾನ್ಯವಾಗಿ ಕಂಡು ಬರುವ  ದೈನಂದಿನ ನಡವಳಿಕೆಗಳು : 

ಬರಿಕಾಲಿನಲ್ಲಿ ಬಯಲಿನಲ್ಲಿ ಆಟವಾಡುವುದು, ಕೈಗಳನ್ನೇ ತೊಳೆಯದೇ ಆಹಾರ ಸೇವಿಸುವುದು, ಬಾಹ್ಯ ಪ್ರದೇಶದಲ್ಲಿ/ ಬಯಲಿನಲ್ಲಿ ಮಲ ವಿಸರ್ಜನೆ, ಶೌಚಾಲಯ ಬಳಸಿದ ನಂತರ ಕೈಗಳನ್ನು ಸರಿಯಾಗಿ ತೊಳೆಯದಿರುವುದು, ತರಕಾರಿ, ಹಣ್ಣು ಹಂಪಲುಗಳನ್ನು ತೊಳೆಯದೇ ಸೇವಿಸುವುದು, ಆಹಾರ ಪದಾರ್ಥಗಳನ್ನು ಮುಚ್ಚಿಡದೇ ತೆರೆದಿಡುವುದು.

ಜಂತುಹುಳ ಬಾಧೆ ನೈರ್ಮಲ್ಯತೆಯ ಕೊರತೆ ಹಾಗೂ ವೈಯುಕ್ತಿಕ ಶುಚಿತ್ವದ ಕೊರತೆಯಿಂದ ಉಂಟಾಗುತ್ತದೆ. ಜಂತುಹುಳ ಸೋಂಕಿನ ಮಣ್ಣನ್ನು ಸ್ಪರ್ಶಿಸುವುದರಿಂದ ಜಂತುಹುಳ ಬಾಧೆ ಬರುತ್ತದೆ. 

ಜಂತು ಹುಳ ಬಾಧೆಯ ಲಕ್ಷಣಗಳು:

ಯಾವ ಮಕ್ಕಳಲ್ಲಿ ಜಂತು ಹುಳ ಸಂಖ್ಯೆ ಹೆಚ್ಚಿದೆಯೋ, ಆ ಮಕ್ಕಳಲ್ಲಿ ಜಂತು ಹುಳ ಬಾಧೆಯ ಲಕ್ಷಣಗಳು ತೀವ್ರವಾಗಿರುತ್ತದೆ. ತೀವ್ರ ಜಂತು ಹುಳ ಬಾಧೆಯಿಂದಾಗಿ ಹೊಟ್ಟೆನೋವು, ಭೇದಿ, ಹಸಿವಿಲ್ಲದಿರುವುದು ಹಾಗೂ ಸುಸ್ತು ಇಂತಹ ಲಕ್ಷಣಗಳು ಕಂಡುಬರುತ್ತವೆ. ಜಂತು ಹುಳ ಸಂಖ್ಯೆ ಕಡಿಮೆ ಇದ್ದವರಲ್ಲಿ ಯಾವುದೇ ತೊಂದರೆಗಳು ಕಾಣಿಸದಿರಲೂಬಹುದು.

ಜಂತು ಹುಳ ಬಾಧೆಯಿಂದ ಆರೋಗ್ಯ ಮತ್ತು ಪೌಷ್ಠಿಕತೆಯ ಮೇಲೆ ಉಂಟಾಗುವ ಪರಿಣಾಮಗಳು :

ಜಂತು ಹುಳ ರಕ್ತವನ್ನು ಹೀರುವುದರಿಂದ ಮಕ್ಕಳಲ್ಲಿ ರಕ್ತ ಹೀನತೆ ಉಂಟಾಗುತ್ತದೆ. ಮಕ್ಕಳ ಬೆಳವಣಿಗೆಗೆ ಅಗತ್ಯವಿರುವ ಪೌಷ್ಠಿಕಾಂಶಗಳನ್ನು ಜಂತು ಹುಳ ಹೀರುವುದರಿಂದ ಮಕ್ಕಳಲ್ಲಿ ಅಪೌಷ್ಟಿಕತೆ ಉಂಟಾಗುತ್ತದೆ. ಅಪೌಷ್ಟಿಕತೆಯಿಂದಾಗಿ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತದೆ. ಜಂತು ಹುಳ ಕರುಳಿನಲ್ಲಿರುವ ವಿಟಮಿನ್ ಎ ಪೌಷ್ಠಿಕಾಂಶವನ್ನು ಹೀರುತ್ತದೆ.

ಜಂತು ಹುಳ ಬಾಧೆಯಿಂದ ಮಕ್ಕಳ ಶಿಕ್ಷಣ ಮತ್ತು ಭವಿಷ್ಯದ ಸಾಮಥ್ರ್ಯದ ಮೇಲೆ ಉಂಟಾಗುವ ಪರಿಣಾಮಗಳು: 

ಜಂತು ಹುಳ ಬಾಧೆಯಿಂದಾಗಿ ಮಕ್ಕಳು ಹೆಚ್ಚಾಗಿ ರೋಗಗ್ರಸ್ತರಾಗುತ್ತಿದ್ದು, ಶಾಲೆಗಳಿಗೆ ಗೈರು ಹಾಜರಾತಿಯಾಗುವುದು ಅಥವಾ ತರಗತಿಯಲ್ಲಿ ಪಾಠದ ಬಗ್ಗೆ ಏಕಾಗ್ರತೆ ನೀಡಲು ವಿಫಲರಾಗುತ್ತಾರೆ. ಮಕ್ಕಳ ಶಾರೀರಿಕ ಹಾಗೂ ಭೌದ್ದಿಕ ಬೆಳವಣಿಗೆ ಕುಂಠಿತವಾಗಿ ಭವಿಷ್ಯದಲ್ಲಿ ಅವರ ಕೆಲಸ ಮಾಡುವ ಸಾಮಥ್ರ್ಯ ಕಡಿಮೆಯಾಗಬಹುದು. ಜಂತು ಹುಳ ನಿವಾರಣೆಗೆ ಔಷಧಿ-ವಿಶ್ವ ಸಂಸ್ಥೆಯು ಪ್ರಮಾಣೀಕರಿಸಿದ ಆಲ್ಬೆಂಡಝೋಲ್ 400 ಮಿ. ಗ್ರಾಂ ಮಾತ್ರೆ ಉಚಿತವಾಗಿ ಸಿಗುತ್ತದೆ.

ಆಲ್ಬೆಂಡಝೋಲ್ ಮಾತ್ರೆಯನ್ನು 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ವಿತರಿಸುವ ಪ್ರಮಾಣ : 

1 ವರ್ಷದಿಂದ 2 ವರ್ಷದವರೆಗಿನ ಮಕ್ಕಳಿಗೆ ಅರ್ಧ ಆಲ್ಬೆಂಡಝೋಲ್ ಮಾತ್ರೆ (ಹುಡಿ ಮಾಡಿ ಎದೆ ಹಾಲಿನಲ್ಲಿ ಬೆರೆಸಿ ನೀಡುವುದು), 2 ವರ್ಷದಿಂದ 19 ವರ್ಷದವರೆಗಿನ ಮಕ್ಕಳಿಗೆ ಪೂರ್ಣ ಆಲ್ಬೆಂಡಝೋಲ್ ಮಾತ್ರೆ (ಚೀಪಿ ತಿನ್ನುವುದು)

ಜಂತುಹುಳ ಬಾಧೆ ನಿವಾರಣೆಯ ಉಪಯೋಗಗಳು : 

ರಕ್ತ ಹೀನತೆಯನ್ನು ತಡೆಗಟ್ಟುವುದು, ಪೌಷ್ಠಿಕತೆಯಲ್ಲಿ  ಸುಧಾರಣೆ, ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು, ಏಕಾಗ್ರತೆ, ಕಲಿಕೆಯ ಶಕ್ತಿ ಹಾಗೂ ಶಾಲಾ ಹಾಜರಾತಿ ಸುಧಾರಿಸುವುದು, ಜಂತು ಹುಳ ಬಾಧೆ ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದು ನಿಯಂತ್ರಿಸಲ್ಪಡುತ್ತದೆ.

2026-27ನೇ ಸಾಲಿನ ಗುರಿ 511049. ಮಕ್ಕಳಿಗೆ ಜಂತು ಹುಳ ನಿವಾರಣಾ ಮಾತ್ರೆಯನ್ನು ಕೊಡಿಸಿ,  ಮಕ್ಕಳ ಆರೋಗ್ಯ ಸುಧಾರಣೆ ಹೊಂದಿ ಕಲಿಕೆಯಲ್ಲಿ ಏಕಾಗ್ರತೆಯನ್ನು ಸಾಧಿಸಲು ನೆರವಾಗಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮ : ಮಕ್ಕಳಿಗೆ ಮಾತ್ರೆ ವಿತರಣೆ Rating: 5 Reviewed By: karavali Times
Scroll to Top