ಬೆಳ್ಳಾರೆ, ಸೆಪ್ಟೆಂಬರ್ 09, 2026 (ಕರಾವಳಿ ಟೈಮ್ಸ್) : ಬೆಳ್ಳಾರೆ ಸರಕಾರಿ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆ ಕಳವುಗೈದ ಪ್ರಕರಣ ಬೇಧಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪುತ್ತೂರು-ಕೊಳ್ತಿಗೆ ನಿವಾಸಿ ಕೆ ರಾಮಚಂದ್ರ (35) ಎಂದು ಹೆಸರಿಸಲಾಗಿದೆ. ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ಅವರಲ್ಲಿ ಸೆ 2 ರಂದು ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ ಬಟ್ಟೆಗಳು ಕಾಣೆಯಾಗಿದ್ದ ಬಗ್ಗೆ ವಿದ್ಯಾರ್ಥಿನಿಯರು ದೂರಿಕೊಂಡಿದ್ದರು. ಈ ಬಗ್ಗೆ ಮೇಲ್ವಿಚಾರಕಿ ಅವರು ಸೀಸಿ ಕ್ಯಾಮೆರಾ ಪರಿಶೀಲಿಸಿದಾಗ ಸೆ 2 ರಂದು ಬೆಳಗ್ಗಿನ ಜಾವ ಅಪರಿಚಿತ ವ್ಯಕ್ತಿಯೊಬ್ಬರು ಒಣಗಿಸಲು ಹಾಕಿ ಬಟ್ಟೆಗಳಲ್ಲಿ ಕೆಲವು ಬಟ್ಟೆಗಳನ್ನು ಕಳವು ಮಾಡಿಕೊಂಡು ಹೋಗುತ್ತಿರುವುದು ಕಂಡು ಬಂದಿತ್ತು. ಈ ಬಗ್ಗೆ ಮೇಲ್ವಿಚಾರಕಿ ಅವರು ಸೆ 5 ರಂದು ಬೆಳ್ಳಾರೆ ಪೊಲೀಸರಿಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಸೆ 7 ರಂದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಯಲಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ಸೆ 15 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.











0 comments:
Post a Comment