ಈ ಬಾರಿ ಉಳ್ಳಾಲದಲ್ಲಿ ಯುವ ದಸರಾ ಸಂಘಟಿಸಲು ನಿರ್ಧಾರ
ಮಂಗಳೂರು, ಸೆಪ್ಟೆಂಬರ್ 03, 2026 (ಕರಾವಳಿ ಟೈಮ್ಸ್) : ರಾಜ್ಯದಾದ್ಯಂತ ಒಂದು ತಿಂಗಳಿನಿಂದ ನಿರಂತರವಾಗಿ ಆರೋಗ್ಯ ಇಲಾಖೆ, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ವಿಭಾಗದ ಅಧಿಕಾರಿಗಳು ಹೋಟೆಲ್ ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಿ ಗ್ರಾಹಕರಿಗೆ ವಿತರಿಸುವ ಆಹಾರದ ಗುಣಮಟ್ಟ, ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸುತ್ತಿದ್ದು ಹಲವು ನ್ಯೂನ್ಯತೆಗಳು ಕಂಡು ಬಂದಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಹಜ್ ಹಾಗೂ ವಕ್ಫ್ ಇಲಾಖಾ ಸಚಿವ ಮತ್ತು ದ ಕ ಜಿಲ್ಲಾ ಉಸ್ತುವಾರಿ ಸಚಿವ ಡಾ ಯು ಟಿ ಖಾದರ್ ಹೇಳಿದರು.
ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅಡ್ಡದಾರಿಯಲ್ಲಿ ಹಣಗಳಿಸುವ ದುರಾಶೆಗೆ ಬಿದ್ದು, ಹಣಕೊಟ್ಟು ಊಟ ಮಾಡುವ ಗ್ರಾಹಕರಿಗೆ ಕಲಬೆರಕೆ -ಕಲುಷಿತ ಆಹಾರವನ್ನು ವಿತರಿಸಿ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುವ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಅಂತಹ ಸಂಸ್ಥೆಗಳ ವಿರುದ್ದ ಮುಲಾಜಿಲ್ಲದೆ ಕ್ರಮ ಜರಗಿಸಲಾಗುವುದು ಎಂದರು.
ಈ ಬಾರಿ ಮಂಗಳೂರು ದಸರಾ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಕರಾವಳಿ ಭಾಗದ ಯುವ ಸಮುದಾಯಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಬಾರಿ ಉಳ್ಳಾಲದಲ್ಲಿ 'ಯುವ ದಸರಾ' ಕಾರ್ಯಕ್ರಮವನ್ನು ಸಂಘಟಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ಇದೇ ವೇಳೆ ಹೇಳಿದರು.
ಇದೇ ವೇಳೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗಾಗಿ 2026 -27ನೇ ಸಾಲಿನ ಶಿಷ್ಯ ವೇತನವನ್ನು ವಿತರಿಸಲು ಅರ್ಜಿ ಆಹ್ವಾನ ಮಾಡಲಾಗಿದ್ದು, ಆ ಕುರಿತ ಪೋಸ್ಟರ್ ಸಚಿವರು ಬಿಡುಗಡೆಗೊಳಿಸಿದರು.













0 comments:
Post a Comment