ಪುತ್ತೂರು, ಸೆಪ್ಟೆಂಬರ್ 04, 2026 (ಕರಾವಳಿ ಟೈಮ್ಸ್) : ತಾಲೂಕಿನ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆಗಸ್ಟ್ 24 ರಂದು ರಾತ್ರಿ ಕಾಣಿಕೆ ಡಬ್ಬಿ ಕಳವು ಪ್ರಕರಣ ಬೇಧಿಸಿರುವ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಸೊತ್ತುಗಳ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಕಾಸರಗೋಡು ನಿವಾಸಿ ಸತೀಶ (31) ಎಂದು ಹೆಸರಿಸಲಾಗಿದೆ. ಇಲ್ಲಿನ ದೇವಸ್ಥಾನದ ಹೊರಗೆ ಇಟ್ಟಿದ್ದ ಕಾಣಿಕೆ ಡಬ್ಬಿ ಕಳವಾಗಿರುವುದು ಆ 25 ರಂದು ಬೆಳಕಿಗೆ ಬಂದಿತ್ತು. ಈ ಬಗ್ಗೆ ದೇವಸ್ಥಾನದ ಸೀಸಿ ಟಿವಿ ಪರಿಶೀಲನೆ ನಡೆಸಿದಾಗ ಆ 24 ರಂದು ರಾತ್ರಿ ಅಪರಿಚಿತ ವ್ಯಕ್ತಿ ಕಾಣಿಕೆ ಡಬ್ಬಿ ಎತ್ತಿಕೊಂಡು ಹೋಗುತ್ತಿರುವುದು ಕಂಡು ಬಂದಿತ್ತು. ಈ ಬಗ್ಗೆ ದೇವಸ್ಥಾನದ ಆಡಳಿತ ಪದಾಧಿಕಾರಿ ಬೆಟ್ಟಂಪಾಡಿ ನಿವಾಸಿ ವಿನೋದ್ ಕುಮಾರ್ ಅವರು ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾಣಿಕೆ ಡಬ್ಬಿಯಲ್ಲಿ ಸುಮಾರು 4500/- ರೂಪಾಯಿ ಇರುವ ಸಾಧ್ಯತೆ ಇದೆ ಹಾಗೂ ಕಾಣಿಕೆ ಡಬ್ಬಿಯ ಮೌಲ್ಯ 2500/- ರೂಪಾಯಿ ಎಂದವರು ದೂರಿನಲ್ಲಿ ತಿಳಿಸಿದ್ದರು.
ಪ್ರಕರಣದ ಆರೋಪಿಗಳ ಪತ್ತೆಗಾಗಿ ಪೊಲೀಸರ ತನಿಖಾ ತಂಡವು ಕೇರಳದ ಕಿನ್ನಿಂಗಾರು, ಬದಿಯಡ್ಕ, ಆದೂರು ಕಡೆಗಳಲ್ಲಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ, ಅಂತರ್ ರಾಜ್ಯ ಕಳ್ಳತನ ಮಾಡುವ ಆರೋಪಿ ಸತೀಶ (31) ಎಂಬಾತನನ್ನು ಕೇರಳದ ಬದಿಯಡ್ಕ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ. ಬಂಧಿತನಿಂದ ಕಳ್ಳತನ ಮಾಡಿದ ಕಾಣಿಕೆ ಡಬ್ಬಿ ಹಾಗೂ ಕಳ್ಳತನ ಮಾಡಲು ಉಪಯೋಗಿಸಿದ ಸುಮಾರು 1 ಲಕ್ಷ ರೂಪಾಯಿ ಮೌಲ್ಯದ ಬೈಕ್ ಸ್ವಾಧೀನಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ಮೇಲೆ ಈಗಾಗಲೇ ಬದಿಯಡ್ಕ ಪೆÇಲೀಸ್ ಠಾಣೆಯಲ್ಲಿ ಅಡಿಕೆ ಕಳ್ಳತನ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯ ಬಂಧನ ಕಾರ್ಯಾಚರಣೆಯಲ್ಲಿ ಪುತ್ತೂರು ಎಎಸ್ಪಿ ಪ್ರಮೋದ್ ಕುಮಾರ್, ಅವರ ನಿರ್ದೇಶನದಂತೆ, ಪುತ್ತೂರು ಗ್ರಾಮಾಂತರ ಠಾಣಾ ಪ್ರಭಾರ ಇನ್ಸ್ ಪೆಕ್ಟರ್ ತಿಮ್ಮಪ್ಪ ನಾಯ್ಕ್ ಅವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣಾ ಪಿಎಸ್ಸೈಗಳಾದ ಗುಣಪಾಲ ಜೆ ಹಾಗೂ ಸುಷ್ಮಾ ಜಿ ಭಂಡಾರಿ ಅವರ ನೇತೃತ್ವದಲ್ಲಿ ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣಾ ಸಿಬ್ಬಂದಿಗಳಾದ ರಮೇಶ್, ನಾಗರಾಜ, ಮಂಜುನಾಥ, ಆಕಾಶ್, ಕಾರ್ತಿಕ್ ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳಾದ ಶರಣಪ್ಪ ಪಾಟೀಲ್, ಈರಣ್ಣ ಹಾಗೂ ಹರಿಪ್ರಸಾದ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಿ ಡಿ ಆರ್ ವಿಭಾಗದ ಸಂಪತ್ ಮತ್ತು ದಿವಾಕರ್ ಅವರುಗಳು ಭಾಗವಹಿಸಿದ್ದರು.













0 comments:
Post a Comment